
ಕಲಬುರಗಿ,ಮಾ.18-ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ವೆಂಕಟೇಶ ದೇಶಪಾಂಡೆ ಸೇರಿದಂತೆ ಮೂವರು ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ.
ಗ್ರಾಮೀಣ ವಿಕಲಚೇತನ ಪುನರ್ವಸತಿ ಕಾರ್ಯಕರ್ತನ ಗೌರವಧನ ಮಂಜೂರು ಮಾಡಲು 10 ಸಾವಿರ ರೂ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ವೆಂಕಟೇಶ ದೇಶಪಾಂಡೆ, ಜೇವರ್ಗಿ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಅಧಿಕಾರಿ ನಾನಾಗೌಡ ಹೊನ್ನಳ್ಳಿ ಹಾಗೂ ಪ್ರಥಮ ದರ್ಜೆ ಸಹಾಯಕ ಅಮರೇಶ ನಾಯಕ ಅವರನ್ನು ಶುಕ್ರವಾರ ಸಂಜೆ ಬಂಧಿಸಿದ್ದಾರೆ.
ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನ ಪುನರ್ವಸತಿ ಕಾರ್ಯಕರ್ತರಾಗಿ ಗುರುರಾಜ ಹೇರೂರ ಕೆಲಸ ನಿರ್ವಹಿಸುತ್ತಿದ್ದು, ಮಾಸಿಕ 9 ಸಾವಿರದಂತೆ 8 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿತ್ತು. ಇದನ್ನು ಬಿಡುಗಡೆ ಮಾಡಲು ವೆಂಕಟೇಶ ದೇಶಪಾಂಡೆ ಹಾಗೂ ಇತರರು 10 ಸಾವಿರ ರೂ.ಲಂಚ ಕೇಳಿದ್ದರು ಎನ್ನಲಾಗಿದೆ.
ವಾರದ ಹಿಂದೆ ಗೌರವಧನವನ್ನು ಬಿಡುಗಡೆ ಮಾಡಲಾಗಿತ್ತು. ಮೊದಲೇ ಒಪ್ಪಿಕೊಂಡಂತೆ 10 ಸಾವಿರ ಲಂಚದ ಹಣವನ್ನು ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದ ಎದುರಿಗೆ ಇರುವ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ತಲುಪಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೆಂಕಟೇಶ ದೇಶಪಾಂಡೆ, ನಾನಾಗೌಡ ಹೊನ್ನಳ್ಳಿ ಹಾಗೂ ಅಮರೇಶ ನಾಯಕ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಎ.ಆರ್.ಕರ್ನೂಲ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡಿಯಿತು.