ಕೋಲಾರ,ಜೂ,೧೦- ಅಧಿಕಾರಿಗಳು ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್ ಹೇಳಿದರು.
ಶ್ರೀನಿವಾಸಪುರದ ತಾ.ಪಂನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡುವಂತೆ ಮಾಡದೆ ಅವರ ಕೆಲಸ ಮಾಡಿಕೊಡಬೇಕು ಎಂದು ಹೇಳಿದರು.ಸೇವೆಯಲ್ಲಿ ಇದ್ದಾಗ ಅಧಿಕಾರದ ದರ್ಪ ತೋರಿಸದೇ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಿ ಕೆಲಸ ಮಾಡಿಕೊಡಿ. ನಿವೃತ್ತರಾದ ನಂತರ ನಿಮಗೂ ಇದೇ ಪರಿಸ್ಥಿತಿ ಬರುತ್ತದೆ ಎಂಬುದನ್ನು ಮರೆಯದಿರಿ ಎಂದರು.
ಸಾರ್ವಜನಿಕರು ನಿರ್ಭಯವಾಗಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು. ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ೨೨ ಅರ್ಜಿ ಬಂದಿವೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ೧೫ ದಿಗಳಲ್ಲಿ ಅರ್ಜಿಗಳ ವಿಲೇವಾರಿ ಮಾಡಬೇಕು. ಹಾಗೆ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ಕಾರಣ ತಿಳಿಸಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆಗೆ ಸಂಬಂಧಿಸಿ ೧೧, ತಾ.ಪಂಗೆ ೫, ಪುರಸಭೆ, ಲೋಕೋಪಯೋಗಿ ಇಲಾಖೆ, ಭೂಮಾಪನ ಇಲಾಖೆಗೆ ಸಂಬಂಧಿಸಿದಂತೆ ತಲಾ ೧ ಹಾಗೂ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿ ೩ ಅರ್ಜಿ ಸ್ವೀಕರಿಸಲಾಯಿತು.
ತಹಶೀಲ್ದಾರ್ ಶಿರಿನ್ತಾಜ್, ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಎಂ.ಪಿ.ಯಶವಂತ್ ಕುಮಾರ್, ಎ.ವಿ.ರೇಣುಕಾ ಇದ್ದರು.