ದಾವಣಗೆರೆ.ಮಾ.೩೧: ನಗರದ ಹೊರವಲಯದಲ್ಲಿ ಇರುವ ಕರೂರು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶೈನ್ ವುಡ್ ಇಂಡಸ್ಟ್ರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ಬೆಲೆಯ ಮರದ ಸಲಕರಣೆಗಳು ಸುಟ್ಟು ಕರಕಲಾಗಿವೆ.ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಮರದ ಉಪಕರಣಗಳನ್ನು ತಯಾರಿಸುವ ಹಾಗೂ ಮರದ ಉಪಕರಣಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಪರಿಕರಗಳನ್ನು ಇಲ್ಲಿ ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ.ಬೆಂಕಿ ಅನಾಹುತದಿಂದ 32ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ ಎಂದು ಇಂಡಸ್ಟ್ರೀಸ್ ಮಾಲೀಕರು ಅಂದಾಜು ವ್ಯಕ್ತಪಡಿಸಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಂಧಿ ನಗರ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.ಬೆಂಕಿ ಅನಾಹುತಕ್ಕೆ ಸಂಬಂಧಿಸಿದಂತೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.