
ನಟ ಆದಿತ್ಯ ಅಭಿನಯದ ‘ಟೆರರ್ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆ ಮಾಡಿದೆ.
ನಿರ್ದೇಶಕ ,ನಿರ್ಮಾಪಕ ಆರ್. ಚಂದ್ರು, ನಿರ್ಮಾಪಕ ರಮೇಶ್ ರೆಡ್ಡಿ ಸೇರಿದಂತೆ ಅನೇಕರು ಪಾಲ್ಗೊಂಡು ‘ಟೆರರ್ ಚಿತ್ರದ ಟೀಸರ್ ಗೆ ಶುಭ ಹಾರೈಸಿದರು
ಈ ವೇಳೆ ಆರ್.ಚಂದ್ರು, “ಟೆರರ್’ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ‘ಟೆರರ್ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಹಾರೈಸಿದರು.
ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ, ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು.
ಈ ವೇಳೆ ಮಾತಿಗಿಳಿದ ನಿರ್ದೇಶಕ ರಂಜನ್ ಶಿವರಾಮ್ ಗೌಡ ಅವರು ನಿರ್ಮಾಪಕ ಸಿಲ್ಕ್ ಮಂಜು ಚಿತ್ರ ನಿರ್ಮಾಣ ಮಾಡಿದ್ದಾರೆ.ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ. ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಶೇ.೩೦ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ಹೇಳಿದರು.
ನಾಯಕ ಆದಿತ್ಯ ಮಾತನಾಡಿ ಕನ್ನಡ ಚಿತ್ರರಂಗಕ್ಕೆ “ಎ” ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ನಿರ್ಮಾಣದಲ್ಲಿ ಚಿತ್ರ ತಯಾರಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು.ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು.
ನಿರ್ಮಾಪಕ ಸಿಲ್ಕ್ ಮಂಜು,‘ಎ’ ಸಿನಿಮಾ ಬಿಡುಗಡೆಯಾಗಿ ೨೫ ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.