ಆಯುಷ್ ಆಸ್ಪತ್ರೆಯಲ್ಲಿ ಮತದಾನ ಜಾಗೃತಿ

ಚಿತ್ರದುರ್ಗ.ಏ.೩೦;ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸುವುದು ಕೇವಲ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗದೇ ಇದು ಪ್ರತಿಯೊಬ್ಬರ ಕರ್ತವ್ಯ ಎಂಬುದು ಎಲ್ಲರಿಗೂ ಮನವರಿಕೆಯಾಗಬೇಕು ಎಂದು ಪ್ರಕೃತಿ ಚಿಕಿತ್ಸಾ ತಜ್ಞ ವೈದ್ಯರಾದ ಡಾ. ಗಂಗಾಧರ ವರ್ಮ ತಿಳಿಸಿದರು.ಇಲ್ಲಿನ ಆಯುಷ್ ಆಸ್ಪತ್ರೆ ಆವರಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆಸ್ಪತ್ರೆ ಆಯುಷ್ ವಿಭಾಗ ಚಿತ್ರದುರ್ಗ ಇವರ ಸಹಯೋಗದಲ್ಲಿ ಮತದಾನದ ಹಕ್ಕು ಮತ್ತು ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.18 ವರ್ಷ ಮೇಲ್ಪಟ್ಟಿರುವ ನಾಗರಿಕರಿಗೆ ಸಂವಿಧಾನದತ್ತವಾಗಿ ಮತದಾನದ ಹಕ್ಕು ಪ್ರಾಪ್ತವಾಗಿದೆ. ಇದು ಹಕ್ಕು ಮಾತ್ರವಲ್ಲದೆ ಜವಾಬ್ದಾರಿ ಮತ್ತು ಕರ್ತವ್ಯ. ಚುನಾವಣಾ ಆಯೋಗ, ಸರ್ಕಾರದ ವಿವಿಧ ಇಲಾಖೆಗಳು, ಸರ್ಕಾರೇತರ ಸಂಘಟನೆಗಳು ಮಾಡುತ್ತಿರುವ ಸತತ ಪ್ರಯತ್ನದ ಫಲವಾಗಿ ಜನರಲ್ಲಿ ಮತದಾನದ ಜಾಗೃತಿ ಉಂಟಾಗಿರುವುದು ಸಕಾರಾತ್ಮಕ ಬೆಳವಣಿಗೆ. ಚುನಾವಣೆ ಆಯೋಗದ ಸ್ವೀಪ್‍ನಂಥ ಕಾರ್ಯಕ್ರಮಗಳು ಮತದಾನಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಕಾರಣವಾಗಿದೆ ಎಂದು ತಿಳಿಸಿದರು.