ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಏ.09 : ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಆಂಜನೇಯ ಸ್ವಾಮಿಯ ರಥೋತ್ಸವ ಸಡಗರ, ಸಂಭ್ರಮದಿಂದ ನೆರವೇರಿತು.
ದೇವಸ್ಥಾನದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಕಕ್ಕಿಯ ಭವ್ಯ ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಅಪಾರ ಭಕ್ತರ ಜಯಘೋಷದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿಯನ್ನು ಸಮರ್ಪಿಸಿದರು. ಸಮಾಳ, ನಂದಿಕೋಲು, ಮಂಗಳ ವಾದ್ಯಗಳು ರಥೋತ್ಸವಕ್ಕೆ ಕಳೆ ತಂದಿದ್ದವು. ಇಟ್ಟಿಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ರಥೋತ್ಸವದಲ್ಲಿ ಭಾಗವಹಿಸಿದ್ದರು.
ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಭಕ್ತರು ಸ್ವಾಮಿಗೆ ಹಣ್ಣು, ಕಾಯಿ ಅರ್ಪಿಸಿದರು.