ಉಪೇಂದ್ರ ವಿರುದ್ಧದ ೨ನೇ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು, ಆ.೧೭- ದೌರ್ಜನ್ಯ ಪ್ರಕರಣ ಸಂಬಂಧ ನಟ-ನಿರ್ದೇಶಕ ಉಪೇಂದ್ರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೂ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಉಪೇಂದ್ರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಾಡಿ, ಒಂದೇ ಹೇಳಿಕೆ ಮೇಲೆ ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧ ಎಲ್ಲಾ ದೂರುಗಳಿಗೂ ತಡೆ ನೀಡುವಂತೆ ಮನವಿ ಮಾಡಿದರು. ಉಪೇಂದ್ರ ವಕೀಲರ ಮನವಿ ಪುರಸ್ಕರಿಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರು ಮಧ್ಯಂತರ ತಡೆಯಾಜ್ಞೆ ಆದೇಶ ನೀಡಿದರು. ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಎಂದು ಉಪೇಂದ್ರ ಮನವಿ ಮಾಡಿಕೊಂಡಿದ್ದರು. ಈ ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಒಂದು ಕಡೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೆ ಮತ್ತೊಂದು ಕಡೆ ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ಜಾತಿನಿಂದನೆಯ ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂಬ ವಿಚಾರ ಕಾವೇರಿದ ಚರ್ಚೆಗೆ ಕಾರಣವಾಗಿದೆ. ಅವರು ಆಡಿದ ಮಾತುಗಳ ವಿಚಾರವಾಗಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಅವರನ್ನು ಗಡಿಪಾರು ಮಾಡುವಂತೆ ಕೋಲಾರದಲ್ಲಿ ಆಗ್ರಹಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಉಪೇಂದ್ರ ವಿರುದ್ಧ ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯ ಎಸ್.ಎಂ.ವೆಂಕಟೇಶ್ ಹಾಗೂ ವಿಜಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ದೂರು ಹಾಗೂ ಕೋಲಾರದಲ್ಲಿ ಒಂದು ದೂರ ದಾಖಲಾದ ಬೆನ್ನಲ್ಲೇ ಮಂಡ್ಯದಲ್ಲೂ ಉಪೇಂದ್ರ ವಿರುದ್ದ ದೂರು ಸಲ್ಲಿಕೆಯಾಗಿದೆ. ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಮದ್ದೂರು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಈ ದೂರು ಸಲ್ಲಿಕೆಯಾಗಿದೆ.