
ಬೆಂಗಳೂರು,ಜು.೪- ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ಬೆಂಬಲಿಸಲಿದ್ದು,ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕುಮಾರಸ್ವಾಮಿ ಬಹಳ ಜವಾಬ್ದಾರಿಯಿಂದ ಮಾತನಾಡುತ್ತಿದ್ದು, ಅವರಿಗೆ ನಮ್ಮ ಪೂರ್ಣ ಬೆಂಬಲವಿದೆ ಸರಿಯಾದ ಮಾಹಿತಿ ಇಟ್ಟುಕೊಂಡೇ ಅವರು ಮಾತನಾಡುತ್ತಿದ್ದಾರೆ. ಹಾಗಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಕೊಟ್ಟ ಐದು ಭರವಸೆಗಳನ್ನು ಷರತ್ತಿಲ್ಲದೇ ಕಾರ್ಯರೂಪಕ್ಕೆ ತರಬೇಕು. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹಿ ಮಾಡಿಕೊಟ್ಟ ಗ್ಯಾರಂಟಿ ಜಾರಿ ಮಾಡಲಿ. ಇವತ್ತೊಂದೇ ದಿನ ಸಂಜೆ ೫ ಗಂಟೆವರೆಗೂ ಪ್ರತಿಭಟನೆ ಮಾಡುತ್ತೇವೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಲಿ. ಗ್ಯಾರಂಟಿ ಯೋಜನೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು. ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎನ್ನುವ ವಿಚಾರ ಇರಿಸಿಕೊಂಡು ನಾವು ಹೋರಾಟ ಮಾಡುತ್ತಿದ್ದೇವೆ. ಇಂದು ಒಂದೇ ದಿನ ಹೋರಾಟ ನಡೆಸುತ್ತಿದ್ದು, ಬೇಡಿಕೆ ಈಡೇರದೆ ಇದ್ದರೆ ಮುಂದೆ ಬೇರೆ ರೀತಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪಕ್ಷದ ಶಾಸಕರೆಲ್ಲ ನಗರಕ್ಕೆ ಬರುತ್ತಿದ್ದು, ಅವರ ಜತೆ ಚರ್ಚೆ ಮಾಡಿ ಇವತ್ತು ಅಥವಾ ನಾಳೆ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಯಡಿಯೂರಪ್ಪ ಇದೇ ವೇಳೇ ತಿಳಿಸಿದರು.
ಬಳಿಕ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಇವತ್ತು ಕೇಂದ್ರದಿಂದ ವೀಕ್ಷಕರು ಬರಲಿದ್ದಾರೆ. ವೀಕ್ಷಕರು ಬಂದ ನಂತರ ಅಭಿಪ್ರಾಯ ಸಂಗ್ರಹ ಮಾಡ್ತಾರೆ. ಅಭಿಪ್ರಾಯ ಸಂಗ್ರಹಿಸಿ ಮತ್ತೆ ಕೇಂದ್ರದ ವರಿಷ್ಠರ ಜತೆ ಚರ್ಚೆ ಮಾಡಲಿದ್ದಾರೆ. ಒಂದೆರಡು ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ. ವರಿಷ್ಠರು ಇನ್ನೂ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ. ವೀಕ್ಷಕರು ಬಂದ ನಂತರ ನಾಯಕರ ಜತೆ ಚರ್ಚಿಸಿ ಸಭೆ ಕರೆಯಬಹುದು ಎಂದರು.