ಎಸ್ ಸಿ ಎಸ್ ಟಿಗೆ ಮೋಸ, ಬಿಜೆಪಿ ವಿರುದ್ದ ಡಿಕೆಶಿ ಕಿಡಿ: ನಾಳೆ ರಾಜಭವನದ ಎದುರು ಪ್ರತಿಭಟನೆ

ಬೆಂಗಳೂರು, ಮಾ.23-ಮಿಸಲಾತಿ ಹೆಚ್ಚಳ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೇ ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಸುಳ್ಳು ಹೇಳುವ ಮೂಲಕ ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಜನರ ಕಿವಿಗೆ ಹೂವಿಟ್ಟು ಮೋಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪರಿಶಿಷ್ಟರಿಗೆ ಮೀಸಲಾತಿ ವಿಚಾರದಲ್ಲಿ ಮಾಡುತ್ತಿರುವ ಮೋಸವನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ನಾಳೆ ಬೆಳಗ್ಗೆ 10 ಗಂಟೆಗೆ ರಾಜಭವನದ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಬಿಜೆಪಿ ಸಚಿವರು ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಈ ಸರ್ಕಾರ ಪ್ರಸ್ತಾವನೆ ಸಲ್ಲಿಸದೇ. ಸಂಸತ್ತಿನಲ್ಲಿ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೆ ಮೀಸಲಾತಿ ಮಾಡಿದ್ದೇವೆ ಎಂದು ಹೇಳಿಕೊಂಡು ದಲಿತರಿಗೆ ಮೋಸ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.
ಈ ದ್ರೋಹವನ್ನು ಖಂಡಿಸಿ ನಾಯಕರೆಲ್ಲರೂ ರಾಜ್ಯಪಾಲರ ಭೇಟಿಗೆ ತೀರ್ಮಾನಿಸಿದ್ದು, ನಾಳೆ ಬೆಳಗ್ಗೆ ಭೇಟಿಗೆ ರಾಜ್ಯಪಾಲರ ಬಳಿ ಸಮಯಾವಕಾಶ ಕೇಳುತ್ತೇವೆ. ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿರುವಾಗ ಬಿಜೆಪಿ ಸರ್ಕಾರ ಈ ವಿಚಾರವಾಗಿ ಪ್ರಸ್ತಾವನೆ ಸಲ್ಲಿಸಲಿಲ್ಲ ಯಾಕೆ? ಈ ವಿಚಾರದಲ್ಲಿ ತಮಗೆ ಬೇಕಾದ ರೀತಿಯಲ್ಲಿ ಸುಳ್ಳು ಹೇಳಿದರೆ ಅದನ್ನು ನಂಬಲು ಇಲ್ಲಿ ಯಾರೂ ಸಿದ್ಧರಿಲ್ಲ. ಅವರಿಗೆ ಈ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಈ ಮೀಸಲಾತಿ ಹೆಚ್ಚಳ ವಿಚಾರ ಸೇರಿಸಬೇಕು ಎಂದರು.
ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರು ಹಾಗೂ ಬೇರೆ ಸಮುದಾಯದ ನಾಯಕರುಗಳು ಭಾಗವಹಿಸಬೇಕು ಎಂದು ಆಹ್ವಾನಿಸುತ್ತಿದ್ದೇನೆ. ಜನರನ್ನು ನಂಬಿಸಿ ಮೋಸ ಮಾಡಿರುವ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಹೀಗಾಗಿ ರಾಜ್ಯಪಾಲರು ಈ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಕೋಲಾರದ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿರುವ, ‘ಇದು ರಾಜಕೀಯ ಪ್ರೋರಣೆಯಿಂದ ಆಗಿದೆ. ಭಾರತ ಜೋಡೋ ಯಾತ್ರೆ ಮೂಲಕ ಅವರಿಗೆ ಸಿಕ್ಕಿರುವ ಶಕ್ತಿಯನ್ನು ಸಹಿಸಲಾಗದೇ ಅದನ್ನು ಕುಗ್ಗಿಸಲು ಈ ರೀತಿ ಮಾಡಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಇದಕ್ಕೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
ಮೊದಲ ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಅವರು, ನಿನ್ನೆ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರಳಿದ್ದಾರೆ. ಅವರು ತೀರ್ಮಾನ ಮಾಡುತ್ತಾರೆ. ಅಮಾವಾಸೆ ನಂತರ ಚಂದ್ರ ಉದಯವಾಗ ಬೇಕಲ್ಲವೇ ಎಂದು ತಿಳಿಸಿದರು.
ಯಾವುದೇ ಕ್ಷೇತ್ರದಲ್ಲಿ ಗೊಂದಲವಿಲ್ಲ. ನಾವು ಎಲ್ಲರನ್ನು ಕರೆದು ಮಾತನಾಡಿ, ರಾಜಿ ಮಾಡುತ್ತೇವೆ. ಎಲ್ಲರಿಗೂ ನಾವು ಅಧಿಕಾರ ಹಂಚುತ್ತೇವೆ. ಎಲ್ಲರಿಗೂ ಸಮಬಾಳು, ಸಮಪಾಲು ನೀಡುತ್ತೇವೆ ಎಂದು ತಿಳಿಸಿದರು.