ಏ. 27ರಂದು ಮೋದಿ ಮಾತು:ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಪರ ಮೋದಿ, ಯೋಗಿ, ಅಮಿತ್ ಶಾ, ಜೋಶಿ, ನಡ್ಡಾ ಪ್ರಚಾರ

ಕಲಬುರಗಿ,ಏ.21: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 27ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕರ್ತರೊಂದಿಗೆ ಮಾತನಾಡಲಿದ್ದಾರೆ. ಅದೇ ರೀತಿ ಜಿಲ್ಲೆಯ ಎಲ್ಲ 9 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಚಾರ ಮಾಡುವರು ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಹೇಳಿದರು.
ಬಿಜೆಪಿ ಕಚೇರಿಯ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 27ರಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯಕರ್ತರೊಂದಿಗೆ ಆನ್‍ಲೈನ್ ಮೂಲಕ ಮಾತನಾಡುವರು. ಅಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಾ ಮತಕ್ಷೇತ್ರಗಳ ಕೇಂದ್ರ ಸ್ಥಾನದಲ್ಲಿ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕೇಂದ್ರಗಳಲ್ಲಿ ಹಾಗೂ ಬೂತ್ ಮಟ್ಟದ ಕೇಂದ್ರಗಳಲ್ಲಿ, ಮತದಾನ ಕೇಂದ್ರಗಳಲ್ಲಿ ದೊಡ್ಡ ಸ್ಕ್ರೀನ್ ಮೂಲಕ ಮೋದಿ ಅವರ ಮಾತುಗಳನ್ನು ಕೇಳಲು ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.
ಏಪ್ರಿಲ್ 30ರಂದು ಎಲ್ಲ 1835 ಬೂತಗಳಲ್ಲಿ ಸುಮಾರು 30,000 ಮನೆ, ಮನೆಗೆ ಭೇಟಿ ಕಾರ್ಯಕ್ರಮವನ್ನು ಬೆಳಿಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕರಪತ್ರಗಳನ್ನು ಪ್ರತಿ ಮನೆ, ಮನೆಗೆ ತಲುಪಿಸಲಾಗುತ್ತದೆ. ಅಂತಹ ಕರಪತ್ರಗಳನ್ನು ಏಪ್ರಿಲ್ 27ರೊಳಗೆ ಬೂತ್‍ಗಳಿಗೆ ಪೂರೈಕೆಯಾಗಲಿದೆ. ಅಂದು ಯಾರೂ ಸಹ ಮನೆಯಲ್ಲಿ ಕಾರ್ಯಕರ್ತರು ಇರದೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಅವರು ತಿಳಿಸಿದರು.
ಇನ್ನು ಜಿಲ್ಲೆಯ ಎಲ್ಲ 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ. ಈ ಸಂಬಂಧ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಳಂದ್ ಮತ್ತು ಕಲಬುರ್ಗಿ ಉತ್ತರ ಕ್ಷೇತ್ರದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜೇವರ್ಗಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಸೇರಿದಂತೆ ಅನೇಕ ನಾಯಕರು ಪ್ರಚಾರ ಮಾಡಲಿದ್ದು, ಶೀಘ್ರವೇ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಸುಮಾರು 19 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾ, ಜೆ.ಪಿ. ನಡ್ಡಾ ಮುಂತಾದ ನಾಯಕರು ಪ್ರಚಾರ ಮಾಡುವರು. ಶುಕ್ರವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬೀದರ್ ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಅವರು ತಿಳಿಸಿದರು.
ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ತಳ್ಳಿ ಹಾಕಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಉನ್ನತ ಮಟ್ಟದ ನಾಯಕರು. ಅವರಿಗೆ ಪಕ್ಷದಲ್ಲಿ ಎಲ್ಲ ರೀತಿಯ ಸ್ಥಾನಮಾನ ಹಾಗೂ ಗೌರವ ಕೊಡಲಾಗಿದೆ. ಈ ಕುರಿತು ಸ್ವತ: ಅವರೇ ಹೇಳಿದ್ದಾರೆ. ಅವರಿಗೆ ಬಲವಂತದಿಂದ ಮುಖ್ಯಮಂತ್ರಿ ಸ್ಥಾನದಿಂದ ತೆಗೆದಿಲ್ಲ. ವಯಸ್ಸಿನ ಕಾರಣದಿಂದಾಗಿ ಸ್ವತ: ರಾಜೀನಾಮೆ ಕೊಟ್ಟು ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮಾಡಿದ ತಂತ್ರವಾಗಿದೆ. ಅತೀ ಹೆಚ್ಚು ಶಾಸಕರು ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಬಾರಿಯೂ ಸಹ ಸಮುದಾಯಕ್ಕೆ ಹೆಚ್ಚಿನ ಟಿಕೆಟ್‍ಗಳನ್ನು ಕೊಡಲಾಗಿದೆ. ಆದಾಗ್ಯೂ, ಕಾಂಗ್ರೆಸ್ ಪಕ್ಷವೇ ದಿ. ಎಸ್. ನಿಜಲಿಂಗಪ್ಪ ಹಾಗೂ ದಿ. ವೀರೇಂದ್ರ ಪಾಟೀಲ್ ಅವರಿಗೆ ಪೂರ್ಣಾವಧಿಯವರೆಗೆ ಕಾರ್ಯನಿರ್ವಹಿಸಲು ಬಿಡಲಿಲ್ಲ. ಅಲ್ಲದೇ ಕಳೆದ 50 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷವು ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ದೂರಿದರು.
ಇನ್ನು ಚಿತ್ತಾಪುರ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ್ ರಾಠೋಡ್ ಅವರ ನಾಮಪತ್ರ ತಿರಸ್ಕøತವಾಗುವ ಭಯದಿಂದ ಅವರ ಪತ್ನಿ ಶ್ರೀಮತಿ ಭಾರತಿ ರಾಠೋಡ್ ಅವರು ನಾಮಪತ್ರ ಸಲ್ಲಿಸಿಲ್ಲ. ಅವರು ಡಮ್ಮಿ ಅಭ್ಯರ್ಥಿಯಾಗಿದ್ದಾರೆ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಬಿಜೆಪಿ ಅಭ್ಯರ್ಥಿ ಮಣಿಕಂಠ್ ರಾಠೋಡ್ ಅವರ ವಿರುದ್ಧದ ಪ್ರಕರಣಗಳು ಇನ್ನೂ ಸಾಬೀತಾಗಿಲ್ಲ. ಹೀಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಹೊಂದಿದ್ದಾರೆ. ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಯವರ ವಿರುದ್ಧವೂ ಪ್ರಕರಣಗಳಿವೆ. ಅಲ್ಲದೇ ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಓಡಾಡಲು ಬಿಡುವುದಿಲ್ಲ ಎಂದು ಹೆದರಿಕೆ ಹಾಕಿದ್ದರು. ಈಗಲೂ ನಾವು ಹೇಳುತ್ತೇವೆ. ಅವರು ಎಲ್ಲಿ ಕರೆಯುತ್ತಾರೋ ಅಲ್ಲಿಗೆ ನಾವು ಬರುತ್ತೇವೆ ಎಂದು ಎನ್. ರವಿಕುಮಾರ್ ಅವರು ಹೇಳಿದರು.
ಬಿಜೆಪಿ ಅಭ್ಯರ್ಥಿ ಮಣಿಕಂಠ್ ರಾಠೋಡ್ ಅವರ ವಿರುದ್ಧದ ಪ್ರಕರಣಗಳಿಂದಾಗಿ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ್ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಮನವೊಲಿಸಲಾಗುತ್ತದೆ. ಅವರು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಹಾಗಾಗಿ ಪಕ್ಷದಲ್ಲಿ ಉಳಿಯುವ ಹಾಗೆ ನೋಡಿಕೊಳ್ಳುತ್ತೇವೆ. ಅದೇ ರೀತಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದ್ ಚವ್ಹಾಣ್ ಅವರು ರಾಜೀನಾಮೆ ಕೊಟ್ಟಿಲ್ಲ. ನಾನು ಮಾತನಾಡಿ ಪಕ್ಷದಲ್ಲಿಯೇ ಉಳಿಸಿಕೊಂಡು ಅಭ್ಯರ್ಥಿ ಗೆಲ್ಲುವ ಹಾಗೆ ಮಾಡುವೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಜೇವರ್ಗಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಹಣಮಂತ್ ಹೂಗಾರ್, ಬಸವರಾಜ್ ಬೂದಿಹಾಳ್, ಪ್ರಕಾಶ್ ಪಾಟೀಲ್ ಯತ್ನಾಳ್, ಈಶ್ವರಗೌಡ ಮಾಲಿಪಾಟೀಲ್, ಸಿದ್ದು ಬಳೂಂಡಗಿ, ದಸ್ತಗೀರಸಾಬ್ ನದಾಫ್, ರಮೇಶ್ ಕಲಗುರ್ತಿ ಅವರು ಬಿಜೆಪಿ ಪಕ್ಷವನ್ನು ಸೇರಿದರು. ಅವರಿಗೆ ಪಕ್ಷದ ಧ್ವಜ ಹಾಗೂ ಶಾಲು ಹೊದಿಸಿ ಎನ್. ರವಿಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ಸ್ವಾಗತಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಶೋಕ್ ಬಗಲಿ, ಎಂ.ಬಿ. ಪಾಟೀಲ್ ಹರವಾಳ್, ಮುಕುಂದ್ ದೇಶಪಾಂಡೆ ಮುಂತಾದವರು ಉಪಸ್ಥಿತರಿದ್ದರು.