
ಕಲಬುರಗಿ,ಆ.08:ಕಂಜಕ್ಟವೈಟೀಸ್ (Madras Eye) ಇದು ಒಂದು ವೈರಸನಿಂದ ಹರಡುವ ಕಾಯಿಲೆಯು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಈ ಕಾಯಿಲೆ ಕುರಿತು ಸಾರ್ವಜನಿಕರು ಭಯ ಪಡುವ ಅವಶ್ಯಕತೆಯಿಲ್ಲ. ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ ಸಾಕು ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರಾಜಶೇಖರ ಮಾಲಿ ಅವರು ತಿಳಿಸಿದ್ದಾರೆ.
ಕಂಜಕ್ಟವೈಟೀಸ್ (Madras Eye) ಇದು ಒಂದು ವೈರಸನಿಂದ ಹರಡುವ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎಂದು ಕರೆಯುತ್ತಾರೆ. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ (Discharge) ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೂ ಸಹ ಈ ಕಾಯಿಲೆ ಹರಡಲಿದೆ.
ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಈ ಕಾಯಿಲೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಹಾಗೂ ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚಿದ್ದು, 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ.
ಕಾಯಿಲೆಯ ಲಕ್ಷಣಗಳು: ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ತಮ್ಮ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು.
ಚಿಕಿತ್ಸೆ : ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಚಗೊಳಿಸಬೇಕು. ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸಬೇಕು. ಶಾಲಾ ವಿದ್ಯಾರ್ಥಿ/ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.
ಮುಂಜಾಗ್ರತಾ ಕ್ರಮಗಳು: ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ಕೊಡಿ, ಆರೋಗ್ಯವಂತ ವ್ಯಕ್ತಿಯು ಸೋಂಕುವುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು. ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆಯಬೇಕು.
ಏನು ಮಾಡಬೇಕು: ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು. ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಅಹಾರ ನೀಡಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ/ಟವಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.
ಏನು ಮಾಡಬಾರದು: ಕೈಗಳಿಂದ ಪದೇ ಪದೇ ಕಣ್ಣುಗಳಿಗೆ ಮುಟ್ಟಬಾರದು. ಸ್ವಯಂ ಚಿಕಿತ್ಸೆ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು ಎಂದು ಡಿ.ಹೆಚ್.ಓ. ಅವರು ಸಲಹೆ ನೀಡಿದ್ದಾರೆ.