ಕಲಬುರಗಿ,ಜು.06: ಕನ್ನಡ ನಾಡಿನ ಕಲೆ, ಸಾಹಿತ್ಯ, ಭಾಷೆ ಬೆಳವಣಿಗೆಗೆ ಶ್ರಮಿಸಿದ, ಅನೇಕ ಮೇರು ಕೃತಿಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನು ದೊರಕಿಸಿ ಕೊಡಲು ಸಾಕಷ್ಟು ಪ್ರಯತ್ನಿಸಿದ, ಕನ್ನಡದ ಕಟ್ಟಾಳು, ಅತ್ಯುತ್ತಮ ಸಂಘಟಕ ದೇ.ಜವರೇಗೌಡರು ಕನ್ನಡಕ್ಕೆ ನೀಡಿದ ಕೊಡುಗೆ ಅಮೋಘವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಸಮೀಪದ ಝಾಪೂರ ಸರ್ಕಾರಿ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ದೇ.ಜವರೇಗೌತಿ ಅವರ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ದೇ.ಜ.ಗೌ. ಎಂದೆ ಖ್ಯಾತಿ ಪಡೆದಿರುವ ಅವರು ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯಕ್ಕೆ ತಮ್ಮದೇ ಆದ ಅದ್ವಿತೀಯ ಕೊಡುಗೆಯನ್ನು ನೀಡಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿಸಿಕೊಡುವಲ್ಲಿ ಅವರು ಮಾಡಿರುವ ಪ್ರಯತ್ನ ಅವಿಸ್ಮರಣೀಯವಾಗಿದೆ. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕøತಿ, ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗಳು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆ ಎತ್ತಿ ಮೆರೆಯಬೇಕು ಎಂಬ ಕಳಕಳಿಯಿಂದ ಇಡೀ ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಹೋರಾಟ ಮಾಡಿದ್ದಾರೆ ಎಂದರು.
ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ದೇ.ಜೆ.ಗೌ ಅವರು ಕನ್ನಡದ ಮೇರು ಸಾಹಿತಿಗಳಾಗಿ, ಕನ್ನಡ ಪರ ಹೋರಾಟಗಾರರಾಗಿ, ಕನ್ನಡ ವಿಶ್ವಕೋಶಕ್ಕೆ ಜೀವ ತುಂಬಿದ ಕನ್ನಡದ ಕಟ್ಟಾಳು ಅವರಾಗಿದ್ದಾರೆ. ಅನುವಾದ ಕ್ಷೇತ್ರ, ಜಾನಪದ ಸಾಹಿತ್ಯಕ್ಕೂ ಅವರ ಕೊಡುಗೆ ಅಪಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ಬಸಯ್ಯಸ್ವಾಮಿ ಹೊದಲೂರ, ಬಸವರಾಜ, ಪೀರಪ್ಪ, ಅನೀಲಕುಮಾರ, ಜೈಭೀಮ ಸರಡಗಿ, ವಿದ್ಯಾಸಾಗರ, ಶರಣಬಸಪ್ಪ, ಚನ್ನವೀರ, ನಿಂಗಮ್ಮ ಪೂಜಾರಿ ಸೇರಿದಂತೆ ಮತ್ತಿತರರಿದ್ದರು.