ಕರ್ನಾಟಕದ 7 ಅದ್ಭುತ’ಗಳಲ್ಲೊಂದು ಬಿಜಾಪುರದ ಗೋಲಗುಮ್ಮಟ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮುಖ್ಯಮಂತ್ರಿಗಳಿಂದ ಪ್ರಮಾಣ ಪತ್ರ ಪಡೆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ವಿಜಯಪುರ, ಫೆ.26: ಕರ್ನಾಟಕದ 7 ಅದ್ಭುತಗಳಲ್ಲಿ ನಮ್ಮ ವಿಜಯಪುರ ಜಿಲ್ಲೆಯ ಗೋಳಗುಮ್ಮಟ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಪ್ರಮಾಣ ಪತ್ರ ಹಾಗೂ ಘೋಷಣಾ ಫಲಕ ನೀಡಿದರು.

ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ಇವರ ಸಂಯುಕ್ತಾಶ್ರದಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯದ 7 ಜಿಲ್ಲಾಧಿಕಾರಿಗಳನ್ನು ಪ್ರಮಾಣ ಪತ್ರ ನೀಡಲಾಯಿತು.

ಕರ್ನಾಟಕದ 7 ಅದ್ಭುತ’ಗಳಲ್ಲೊಂದು ಬಿಜಾಪುರದ ಗೋಲಗುಮ್ಮಟ ಸ್ಥಾನ ಪಡೆದಿದ್ದು, ಜಿಲ್ಲೆಯ ಜನರಿಗೆ ಸಂತಸದ ವಿಷಯವಾಗಿದ್ದು, ಜಾಗತಿಕ ಹೆಗ್ಗುರುತುಗಳಾಗಿ ‘ಪ್ರಪಂಚದ 7 ಅದ್ಭುತಗಳು’ ಇರುವ ರೀತಿಯಲ್ಲೇ ಇದೀಗ ಕರುನಾಡಿನ ಹೆಗ್ಗುರುತುಗಳಾಗಿ ‘ಕರ್ನಾಟಕದ 7 ಅದ್ಭುತಗಳು’ ಘೋಷಣೆಯಾಗಿದೆ. ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ ತಾಣಗಳನ್ನು ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಕರ್ನಾಟಕದ 7 ಅದ್ಭುತಗಳು’ ಎಂದು ಘೋಷಿಸಿದ್ದಾರೆ. ಈ ಪೈಕಿ 17ನೇ ಶತಮಾನದಲ್ಲಿ ಬಿಜಾಪುರ ಸುಲ್ತಾನ ಆದಿಲ್ ಶಾಹಿಯಿಂದ ನಿರ್ಮಾಣಗೊಂಡ ಜಗದ್ವಿಖ್ಯಾತ ಗೋಲಗುಮ್ಮಟವೂ ಒಂದಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಕರ್ನಾಟಕದ 7 ಅದ್ಭುತಗಳು ಅಭಿಯಾನದ ರಾಯಭಾರಿ, ಖ್ಯಾತ ನಟ ರಮೇಶ ಅರವಿಂದ, ಕರ್ನಾಟಕ ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ, ಕನ್ನಡ ಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ ಸೇರಿದಂತೆ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.