(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜು.22: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿಯಾಗಿದೆಂದು ಬಿಜೆಪಿ ಮುಖಂಡರು, ಕಾರ್ಯಕರ್ತರು ಇಂದು ನಗರದ ಗಡಿಗಿ ಚೆನ್ನಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.
ವಿಧಾನ ಸಭೆಯಲ್ಲಿ ನಮ್ಮ ಪಕ್ಷದ ಶಾಸಕರನ್ನು ಅಮಾನತುಗೊಳಿಸಿ ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕುವುದು ಕಾಂಗ್ರೆಸ್ ಸರ್ಕಾರದ ಸಂವಿಧಾನ ವಿರೋಧಿ ನಡೆಯಾಗಿದೆಂದು ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. 46 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಕೇಸನ್ನು ಎನ್ಐಎ ತನಿಖೆಗೆ ವಹಿಸಬೇಕು ಸೇರಿದಂತೆ ಹಲವು ಆಗ್ರಹಗಳೊಂದಿಗೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಗೋನಾಳ್ ಮುರಹರ ಗೌಡ, ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಗುತ್ತಿಗನೂರು ವಿರೂಪಾಕ್ಷಗೌಡ, ಎಸ್.ಮಲ್ಲನಗೌಡ, ಗುರುಲಿಂಗನಗೌಡ, ಗಣಪಾಲ ಐನಾಥ ರೆಡ್ಡಿ, ಹನುಂಮತಪ್ಪ, ಅನಿಲ್ ನಾಯ್ಡು ಮೊದಲಾದವರು ಇದ್ದರು.