ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ

ಚಿತ್ರದುರ್ಗ.ಮಾ.೨೦; ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.ಹೊಳಲ್ಕೆರೆ ಪಟ್ಟಣದಲ್ಲಿ  ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ  ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು.  ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ.   ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು.  ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ,  ಸರ್ಕಾರ ಪ್ರತಿಯೊಂದು ವಿಚಾರದಲ್ಲಿ ಸಾರ್ವಜನಿಕರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ. ಈ ಹಿಂದೆ ಬರಗಾಲದಿಂದ ತಾಲೂಕು ನೀರಿನ ಸಮಸ್ಯೆಗೆ ಸಿಲುಕಿತ್ತು. ರೈತರ ತೋಟಗಳು ಒಣಗಿ ಹೋಗುತ್ತಿದ್ದವು. ಸರ್ಕಾರ ಕೆರೆ ಕಟ್ಟೆಗಳು, ಚಕ್ ಡ್ಯಾಮ್, ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದಿಂದ ಕ್ಷೇತ್ರದಲ್ಲಿ ಜಲ ಸಮೃದ್ದಿಯಾಗಿದೆ. ಅಂರ್ತಜಲ ಮಟ್ಟದ ಹೆಚ್ಚಳದಿಂದ ರೈತರ ಬವಣೆ ದೂರವಾಗಿದೆ. ಹಿಂದೆ ರೈತರಿಗೆ 1 ತಾಸು ವಿದ್ಯುತ್ ನೀಡಲಾಗುತ್ತಿತ್ತು. ಈಗ 5 ರಿಂದ 6 ತಾಸು ವಿದ್ಯುತ್ ನೀಡಲಾಗುತ್ತಿದೆ.  ಇದರಿಂದ ರೈತರ ತೋಟಗಳಿಗೆ ನೀರು ಲಭಿಸುತ್ತಿದೆ. ಮಹಿಳೆಯರು ಸರತಿ ಸಾಲಿನಲ್ಲಿ ಕೊಡ ಹಿಡಿದು ಕುಡಿಯುವ ನೀರಿಗಾಗಿ ಕಾಯುತ್ತಿದ್ದರು. ಇಂದು ಈ ಚಿತ್ರಣ ಬದಲಾಗಿದೆ. ಸರ್ಕಾರ ರೂ.367 ಕೋಟಿ ಕುಡಿಯುವ ನೀರಿಗೆ ಹಾಗೂ ಜಲಜೀವನ್ ಮಿಷನ್ ಅಡಿ 180 ಕೋಟಿ ಅನುದಾನ ನೀಡಿದೆ. ರೂ.544 ಕೋಟಿ ವೆಚ್ಚದಲ್ಲಿ ರಸ್ತೆಗಳು, ರೂ. 220 ಕೋಟಿ ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.  ಕ್ಷೇತ್ರದಲ್ಲಿ 9 ಸಾವಿರ ಮನೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸರ್ಕಾರ ಅಸ್ತಿತ್ವದಲ್ಲಿ ಇರದ ಸೊಸೈಟಿಗಳ ಹೆಸರಿನಲ್ಲಿರುವ ಭೂಮಿಯನ್ನು ಹಿಂಪಡೆದು ಗೇಣಿದಾರಿಗೆ ನೀಡಲು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 1000 ಎಕರೆಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪನೆ ಮಾಡಲು ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.