
ದಾವಣಗೆರೆ.ಮಾ.೯: ಕುಕ್ಕುವಾಡದ ಸಕ್ಕರೆ ಕಾರ್ಖಾನೆಯಿಂದ ಆಗುತ್ತಿರುವ ತೊಂದರೆಯನ್ನು ನಿವಾರಿಸುವ ಕುರಿತಂತೆ ರೈತರಿಗೆ ಜಿಲ್ಲಾಡಳಿತ ಭರವಸೆ ನೀಡಿದ್ದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದರೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡ ಬಿ.ಎಂ.ಸತೀಶ್ ಕೊಳೇನಹಳ್ಳಿ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾಧಿಕಾರಿ ಅವರಿಗೆ ರೈತರ ಹಿತಾಸಕ್ತಿಗಿಂತ ರಾಜಕಾರಣಿಗಳಾದ ಶಾಮನೂರು ಶಿವಶಂಕರಪ್ಪ ಅವರ ಹಿತಾಸಕ್ತಿಯೇ ಹೆಚ್ಚೆಂದು ಕಾಣುತ್ತದೆ. ಡಿಸಿಯವರು ಜಿಲ್ಲೆಯ ರೈತರ ಪರವಾಗಿ ಮಾತನಾಡದೆ ಕೇವಲ ರಾಜಕಾರಣಿಗಳು, ಸಕ್ಕರೆ ಕಾರ್ಖಾನೆಗಳ ಮಾಲೀಕರ ಪರವಾಗಿ ಮಾತನಾಡುತ್ತಿದ್ದಾರೆ. ಅವರಿಗೆ ರೈತರ ನೋವು ಕಾಣಿಸುತ್ತಿಲ್ಲ ಎಂದು ಕಿಡಿಕಾರಿದರು.ಜಿಲ್ಲಾಡಳಿತ ನಿಗದಿಯಂತೆ ಮಾರ್ಚ್ 13ರಂದು ಮಧ್ಯಾಹ್ನ 3:30ಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಕ್ಕವಾಡ ಸಕ್ಕರೆ ಕಾರ್ಖಾನೆ ಸುತ್ತಮುತ್ತಲಿನ ಗ್ರಾಮಗಳಾದ ಕೊಳೇನಹಳ್ಳಿ, ಕನಗೊಂಡನಹಳ್ಳಿ, ಬಲ್ಲೂರು, ಶಿರಗಾನಹಳ್ಳಿ, ಜಡಗನಹಳ್ಳಿ, ನಾಗರಸನಹಳ್ಳಿ, ಕುಕ್ಕುವಾಡ, ವಡೆಯರಹಳ್ಳಿ, ಮುದ ಹದಡಿ, ಬಟ್ಲಕಟ್ಟೆ, ಹದಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಕುಕ್ಕವಾಡ ಸಕ್ಕರೆ ಕಾರ್ಖಾನೆ ಚೇರ್ಮೆನ್ ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಭೆ ಕರೆಸಿ, ರೈತರ ಸಮಸ್ಯೆಗಳ ಬಗ್ಗೆ ಕುಲಂಕುಶವಾಗಿ ಚರ್ಚಿಸಿ ಸೂಕ್ತ ಪರಿಹಾರ ಮಾರ್ಗಗಳನ್ನು ತೀರ್ಮಾನ ಮಾಡಬೇಕೆಂದು ಆಗ್ರಹಿಸಿದರು.ಈ ಹಿಂದೆ ನಾವು 2022ರ ಡಿಸೆಂಬರ್ ನಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕುಕ್ಕುವಾಡ ಸಕ್ಕರೆ ಕಾರ್ಖಾನೆಗಳಿಂದ ಆಗುವ ಸಮಸ್ಯೆಗಳನ್ನು ತಿಳಿಸಿ, ಪರಿಹಾರ ಮಾಡುವಂತೆ ಮನವಿ ನೀಡಿದ್ದೆವು. ಅಗ ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ರೈತರ ಸಮಸ್ಯೆ ಕುರಿತು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ಹೇಳಿದ್ದರು. ಆದರೆ ಒಂದು ತಿಂಗಳಾದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 19ರಂದು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಅಂದು ಸ್ಥಳಕ್ಕೆ ಆಗಮಿಸಿದ ದಾವಣಗೆರೆ ತಹಶಿಲ್ದಾರರ ನಮ್ಮ ಮನವಿ ಸ್ವೀಕರಿಸಿ ಶೀಘ್ರವೇ ಕ್ರಮ ಕೈಗೊಳ್ಳಬಹುದು ಎಂದು ಭರವಸೆ ನೀಡಿದ್ದರು. ಇದಾದ ನಂತರ ಒಂದು ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಮತ್ತೆ ಮಾರ್ಚ್ 6ರಂದು ಕುಕ್ಕವಾಡ ಗ್ರಾಮದ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮಧ್ಯಾಹ್ನವಾದರೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ನಮ್ಮ ಸಮಸ್ಯೆಗಳನ್ನು ಕೇಳದ ಕಾರಣ ದಾವಣಗೆರೆಗೆ ಬಂದು ಡಿಸಿ ಕಚೇರಿಗೆ ಬಂದು ಮುತ್ತಿಗೆ ಹಾಕಲಾಗಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸದ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಾರದೇ ಅಪರ ಜಿಲ್ಲಾಧಿಕಾರಿಗಳನ್ನು ಕಳುಹಿಸಿ ನಮ್ಮನ್ನು ಸುಮ್ಮನೆ ಮಾಡಲು ಪ್ರಯತ್ನಿಸಿದರು. ಆದರೆ ನಾವು ಸುಮ್ಮನಾಗದ ಕಾರಣ ಇದೇ ಮಾರ್ಚ್ 13ರಂದು ಸಭೆ ಕರೆಯಲಾಗುವುದೆಂದು ಭರವಸೆ ನೀಡಿದ್ದ ಕಾರಣ ನಾವು ಹಿಂತೆಗೆದುಕೊಂಡಿದ್ದು ಕಾರಣ ಈಗಲಾದರೂ ಜಿಲ್ಲೆಯ ಜಿಲ್ಲಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಖಾನೆ ಮಾಲೀಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಕಳಿಸಿ ಮಾಡಬೇಕು ಇಲ್ಲವಾದರೆ ಅಂದಿನ ಸಭೆಯನ್ನು ಬಹಿಷ್ಕರಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.