ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ20: ಕುಷ್ಠರೋಗ ಸೂಕ್ತ ಔಷಧ, ಉಪಚಾರಗಳಿಂದ ತಗ್ಗಿಸಬಹುದಾದ ಕಾಯಿಲೆ ಆಗಿದೆ, ಯಾವುದೇ ಭಯಕ್ಕೆ ಒಳಗಾಗದೇ ಧೈರ್ಯವಾಗಿ ತಪಾಸಣೆಗೆ ಒಳಪಟ್ಟು ರೋಗ ಮುಕ್ತತೆಗೆ ಸಹಕರಿಸಬೇಕು ಎಂದು ಶಾಸಕ ಎಚ್.ಆರ್. ಗವಿಯಪ್ಪ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಸೋಮವಾರ ಮಹಿಳಾ ಸಮಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕುಷ್ಠರೋಗ ಭಯಪಡುವ ಕಾಯಿಲೆಯಲ್ಲ, ಧೈರ್ಯದಿಂದ ಎದುರಿಸಬೇಕು. ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಆರೋಗ್ಯ ಇಲಾಖೆಯೊಂದಿಗೆ ಸಹಕಾರ ಅತ್ಯವಶ್ಯವಾಗಿದ್ದು, ಆರೋಗ್ಯ ಇಲಾಖೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿ ತಪಾಸಣೆಗೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್ ಮಾತನಾಡಿ, ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿಯೇ ಮಹಾತ್ಮ ಗಾಂಧಿ ಅವರು ಕುಷ್ಠರೋಗ ಮುಕ್ತ ಭಾರತಕ್ಕೆ ಕರೆಕೊಟ್ಟಿದ್ದರು. ಅಂದಿನಿಂದಲೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಾರತದಲ್ಲಿ ರೋಗ ನಿಯಂತ್ರಣ ಕಾರ್ಯ ಕೈಗೊಳ್ಳಲಾಗುತ್ತಿದೆ. ರಾಜ್ಯದ 12 ಜಿಲ್ಲೆಯಲ್ಲಿ ಆಂದೋಲನ ನಡೆಯುತ್ತಿದ್ದು, ಅದರಲ್ಲಿ ವಿಜಯನಗರ ಜಿಲ್ಲೆ ಸಹ ಒಳಗೊಂಡಿದೆ. ಇಂದಿನಿಂದ 14 ದಿನಗಳ ಕಾಲ ಜಿಲ್ಲೆಯಾದ್ಯಂತ ಕುಷ್ಠರೋಗ ಪ್ರಕರಣ ಪತ್ತೆಗಾಗಿ ಆಂದೋಲನ ನಡೆಸಲಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಲೀಂ ಅವರು ಮಾತನಾಡಿ, ಇಂದಿನಿಂದ ಏಕಕಾಲದಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಆಂದೋಲನ ಆರಂಭಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಕುಷ್ಠರೋಗ ನಿರ್ಮೂಲನೆಯಲ್ಲಿ ಸೇವೆ ಸಲ್ಲಿಸಿದ ಚರ್ಮರೋಗ ತಜ್ಞ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಡಾ.ಕೋಮಲ ಎಚ್.ಟಿ., ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯ ಡಾ.ವಂದನಾ, ಹೊಸಪೇಟೆಯ ಕಿರಿಯ ಪ್ರಯೋಗಾಲಯದ ತಾಂತ್ರಿಕ ಅಧಿಕಾರಿ ಎಸ್.ಕರಿಬಸಮ್ಮ ಹಾಗೂ ಬಳ್ಳಾರಿ ವಲಯ ಡೇಮಿಯಲ್ ಫೌಂಡೇಶನ್ನಿನ ಸುಧಾಕರ ಕೆ.ಎಸ್.ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ನಾಯಕ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಕಮಲಮ್ಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಶಾಲಾ ಆಡಳಿತ ಸಂಸ್ಥೆಯ ಮುಖ್ಯಸ್ಥ ರಾಘವೇಂದ್ರ ಆಚಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಸವರಾಜ್ ಹಾಗೂ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಹಾಜರಿದ್ದರು.