ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವ

ಹರಪನಹಳ್ಳಿ.ಮಾ.೩ : ಪಂಚಗಣಾಧೀಶರರ ಐತಿಹಾಸಿಕ ಹಿನ್ನೆಲೆಯುಳ್ಳ ತಾಲ್ಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವವು ನಿನ್ನೆ ಸಂಜೆ ಅಪಾರ ಭಕ್ತರ ಮಧ್ಯೆ ಅತ್ಯಂತ ಶ್ರದ್ಧಾ- ನಿನ್ನೆ ಭಕ್ತಿಗಳಿಂದ ಜರುಗಿತು.ಊರ ಹೊರವಲಯದಲ್ಲಿ ನಿರ್ಮಿಸಿದ್ದ ಆಕರ್ಷಕ ರಥಕ್ಕೆ ಕೆಂಪು, ಬಿಳಿ ಸೇರಿದಂತೆ ವಿವಿಧ ಬಣ್ಣಗಳ ಬಾವುಟ ಹಾಗೂ ಹಲವು ದೇವಾನುದೇವತೆಗಳ ಭಾವಚಿತ್ರ ಅಳವಡಿಕೆಯ ಜತೆಗೆ ಬಾಳೆದಿಂಡು, ಮಾವಿನ ತೋರಣ ಹಾಗೂ ಪುಷ್ಪ ಮಾಲೆಯೊಂದಿಗೆ ಅಲಂಕರಿಸಲಾಗಿತ್ತು.ಮಠದ ಪೀಠಾಧಿಪತಿ ಪಟ್ಟದ ಚಿನ್ಮಯ ಸ್ವಾಮೀಜಿ ಮೂಲಕ ಸಕಲ ವಾದ್ಯ ತಂಡಗಳ ಭಾಜಾ ಭಜಂತ್ರಿಯೊAದಿಗೆ ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ದೇಗುಲದಲ್ಲಿನ ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿಕೊಂಡು ಮೆರವಣಿಗೆ ಹೊರಟಿತು.ಚಿನ್ಮಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥವನ್ನು ಐದು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೋಣಿಬಸವೇಶ್ವರರ ಪಟ ಧ್ವಜವನ್ನು ಬಹಿರಂಗ ಹರಾಜು ಮಾಡಲಾಯಿತು. ಕೊಟ್ಟೂರೇಶ್ವರ ಉತ್ಸವ ಮೂರ್ತಿಯನ್ನು ರಥ ಮಂಟಪದಲ್ಲಿ ಪ್ರತಿಷ್ಠಾಪಿಸುವ ಮೂಲಕ ಅರ್ಚಕರು ಮಹಾ ಮಂಗಳಾರತಿ ನೆರವೇರಿಸುತ್ತಿದ್ದಂತಿಯೇ ಭರ್ಜರಿ ಜಯಘೋಷಗಳ ನಡುವೆ ರಥೋತ್ಸವಕ್ಕೆ ಉತ್ತರಾಭಿಮುಖವಾಗಿ ಚಾಲನ ನೀಡಲಾಯಿತು.ರಾಜ್ಯದ ವಿವಿಧ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ ಹಾಗೂ ಹಾವೇರಿ ಜಿಲ್ಲೆಗಳು ಸೇರಿದಂತೆ ನಾಡಿನಾದ್ಯಂತ ಭಕ್ತಸಾಗರವೇ ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು