ಗದಗ,ಜು29: ಜಿಲ್ಲೆಯಲ್ಲಿ ನಿಂರತರವಾಗಿ ಸುರಿಯುತ್ತಿರುವ ಮಳೆಯಿಂದಾಗುವ ಪ್ರವಾಹ ಹಾಗೂ ಅತೀವೃಷ್ಟಿ ಪರಿಸ್ಥಿತಿಯನ್ನು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಸೂಚನೆ ನೀಡಿದರು.
ಅವರು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರಂತರ ಮಳೆಯಿಂದಾಗಿ ತೆಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿರುತ್ತದೆ. ತೆಗ್ಗು ಪ್ರದೇಶದಲ್ಲಿನ ಜನ, ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಂದರ್ಭಾನುಸಾರ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ತಿಳುವಳಿಕೆ ನೀಡಬೇಕು. ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವವರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನ ಒಲಿಸುವದರ ಮೂಲಕ ಸಂಭವನೀಯ ಜೀವ ಹಾನಿ ತಡೆಗಟ್ಟಲು ಅಗತ್ಯವಿರುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ನಿರಂತರ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರುಡುವ ಸಂಭವವಿದ್ದು ಜನ ಸಾಮಾನ್ಯರು ಶುದ್ಧ ಕುಡಿಯುವ ನೀರಿನ ಬಳಕೆ ಮಾಡುವಂತೆ ಅರಿವು ಮೂಡಿಸಬೇಕು. ಕುಡಿಯುವ ನೀರಿನ ಶುದ್ಧತೆ ಕುರಿತು ಅನುಮಾನವಿದ್ದಲ್ಲಿ ತಕ್ಷಣವೇ ನೀರಿನ ಪರೀಕ್ಷೆಗೊಳಪಡಿಸಬೇಕು. ಹಾಗೂ ಆರೋಗ್ಯ ಸುರಕ್ಷತೆಗಾಗಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು.
ಮಳೆ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುವಂತೆ ಗ್ರಾಮಗಳಲ್ಲಿನ ಚರಂಡಿ, ಕಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಅಲ್ಲದೇ ರೈತರು ತಮ್ಮ ಜಾನುವಾರುಗಳನ್ನು ವಿಧ್ಯುತ ಕಂಬಳಿಗೆ ಕಟ್ಟದಂತೆ ಹಾಗೂ ಗ್ರಾಮಗಳಲ್ಲಿನ ಕೆರೆ, ನದಿ ದಡಕ್ಕೆ ಸಾರ್ವಜನಿಕರು, ಜಾನುವಾರುಗಳನ್ನು ಒಯ್ಯದಂತೆ ಜಾಗೃತಿ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಯೋಜನೆ ರೂಪಿಸಿಕೊಂಡು ಜನ, ಜಾನುವಾರು ಜೀವ ಹಾನಿಯಾಗದಂತೆ ಎಲ್ಲ ಇಲಾಖೆಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಬೇಕು. ಹಾಗೂ ಗ್ರಾಮಗಳ ಪ್ರವಾಹ ಪರಿಸ್ಥಿತಿ ಕುರಿತು ಮೇಲಾಧಿಕಾರಿಗಳಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್.ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮುಖ್ಯ ಯೋಜನಾಧಿಕಾರಿ ವಾಗೀಶ, ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ ಸೇರಿದಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.