ಎರಡು ವಾರಕ್ಕಿಂತ ಹೆಚ್ಚು ದಿನಗಳ ಕೆಮ್ಮು, ಸಂಜೆ ವೇಳೆ ಜ್ವರ ಇದ್ದರೆ ಕಫ ಪರೀಕ್ಷೆ ಮಾಡಿಸಿ: ಡಾ.ಮೋಹನಕುಮಾರಿ
ಬಳ್ಳಾರಿ,ಜು.04: ಎರಡು ವಾರಕ್ಕಿಂತ ಹೆಚ್ಚು ದಿನಗಳ ಕೆಮ್ಮು ಹಾಗೂ ಸಂಜೆ ವೇಳೆ ಜ್ವರ ಇದ್ದರೆ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಒಮ್ಮೆ ಕಫ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ ಅವರು ಹೇಳಿದರು.
ಕ್ಷಯಮುಕ್ತ ಗ್ರಾಮ ಪಂಚಾಯತಿ ಅಭಿಯಾನದಡಿ ಬಳ್ಳಾರಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್ಗಳಲ್ಲಿ ಕ್ಷಯರೋಗಿಗಳನ್ನು ಆರಂಭದಲ್ಲೇ ಗುರುತಿಸುವ ಜವಾಬ್ದಾರಿ ಹಾಗೂ ಗ್ರಾಮ ಪಂಚಾಯತಿಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ನೀಡುವ ಅಭಿಯಾನವನ್ನು ಕೈಗೊಳ್ಳಲು ರಾಜ್ಯ ಮಟ್ಟದ ನಿರ್ದೇಶನದಂತೆ, ಮಂಗಳವಾರ ಬಳ್ಳಾರಿ ತಾಲೂಕು ಪಂಚಾಯತಿಯಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕ್ಷಯಮುಕ್ತ ಗ್ರಾಮ ಪಂಚಾಯತ ಕುರಿತ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಕ್ಷಯರೋಗಿಯು ಕೆಮ್ಮಿದಾಗ ಅಥವಾ ಸೀನಿದಾಗ ಗಾಳಿ ಮೂಲಕ ಒಬ್ಬರಿಂದ ಒಬ್ಬರಿಗೆ ರೋಗ ಹರಡುತ್ತದೆ. ಸಾಮಾನ್ಯವಾಗಿ ಎರಡು ವಾರಕ್ಕಿಂತ ಹೆಚ್ಚು ದಿನಗಳ ಕೆಮ್ಮು, ಸಂಜೆ ವೇಳೆ ಜ್ವರ, ರಾತ್ರಿ ವೇಳೆ ಮೈ ಬೆವರುವುದು, ಕಪದಲ್ಲಿ ರಕ್ತ, ತೂಕ ಇಳಿಕೆ, ಹಸಿವಾಗದಿರುವುದು ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡಬಾರದು. ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ತಿಳಿಸಿದರು.
ಕ್ಷಯರೋಗಿಯನ್ನು ಮುಟ್ಟುವುದರಿಂದ, ಕೈಕುಲುಕುವುದರಿಂದ ರೋಗ ಹರಡುವುದಿಲ್ಲ ಎಂಬ ಮಾಹಿತಿಯನ್ನು ನೀಡುತ್ತಾ, ಪ್ರತಿಯೊಂದು ಗ್ರಾಮದಲ್ಲಿ ಶಂಕಿತ ಕ್ಷಯರೋಗಿಗಳನ್ನು ಆರಂಭದಲ್ಲಿಯೇ ಗುರುತಿಸಿ ರೋಗ ಮುಕ್ತರನ್ನಾಗಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ನಿಕ್ಷೇಪೋಣೆ ಯೋಜನೆಯ ಡಿಬಿಟಿ ಅಡಿಯಲ್ಲಿ ಚಿಕಿತ್ಸೆ ಪೂರ್ಣಗೊಳ್ಳುವವರಿಗೆ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರಕ್ಕಾಗಿ ಮಾಸಿಕ ರೂ.500 ಗಳನ್ನು ನೇರವಾಗಿ ಅವರ ಖಾತೆಗೆ ಜಮ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶ್ರೀಧರ ಬಾರಕೇರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ತಾಲೂಕು ಪಂಚಾಯತ ಐಇಸಿ ಸಂಯೋಜಕ ರಮೇಶ, ಕ್ಷಯರೋಗ ವಿಭಾಗದ ಓಬಳರೆಡ್ಡಿ, ವೀರೇಶ, ಬಸವರಾಜ ರಾಜಗುರು, ಚಂದ್ರಶೇಖರ ಸೇರಿದಂತೆ ವೈದ್ಯಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.