
ಕಲಬುರಗಿ: ಮಾ.25:ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಜ್ವರ ಬರುವುದು, ತೂಕದ ಇಳಿಕೆ, ರಾತ್ರಿ ವೇಳೆ ಬೆವರುವುದು, ಹಸಿವಾಗದಿರುವ ಲಕ್ಷಣಳು ಕ್ಷಯರೋಗದ್ದಾಗಿವೆ. ಆಗ ನಿರ್ಲಕ್ಷ್ಯ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಕಾಯಿಲೆಯಿಂದ ಮುಕ್ತಿ ಹೊಂದಬೇಕು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರನ 'ನಗರ ಪ್ರಾಥಮಿಕ ಆರೋಗ್ಯ ಕೇಂದ'್ರದಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗ'ದ ಸಹಯೋಗದೊಂದಿಗೆ ಶುಕ್ರವಾರ ಏರ್ಪಡಿಸಲಾಗಿದ್ದ 'ವಿಶ್ವ ಕ್ಷಯರೋಗ ನಿರ್ಮಲನಾ ದಿನಾಚರಣೆ'ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕ್ಷಯ ಸಂಪೂರ್ಣವಾಗಿ ಗುಣಮುಖವಾಗುವಂತಹ ರೋಗವಾಗಿದೆ. ಇದು ರೋಗಿಯು ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಮುಟ್ಟುವುದರಿಂದ, ಕೈ ಕುಲುಕುವುದರಿಂದ ಬರುವುದಿಲ್ಲ. ಕ್ಷಯ ರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿದೆ. ಇದರ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ಹಸಿರು ತರಕಾರಿ, ಹಾಲು, ಹಣ್ಣು, ಮೊಟ್ಟೆ, ಮೀನು ಸೇವನೆ ಮಾಡಬೇಕು. ಎಣ್ಣೆಯಲ್ಲಿ ಬೇಯಿಸಿದ, ಕರಿದ ಆಹಾರಗಳ ಸೇವನೆ ಬೇಡ ಎಂದು ರೋಗಕ್ಕೆ ಸಂಬಂಧಿಸಿದಂತೆ ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.
ಉಪನ್ಯಾಸಕ, ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ ಮಾತನಾಡಿ, ವಿಶ್ವಸಂಸ್ಥೆ ಕ್ಷಯರೋಗ ಮುಕ್ತ ವಿಶ್ವವನ್ನು 2030ನೇ ವರ್ಷದ ಗುರಿಯನ್ನಾಗಿರಿಸಿಕೊಂಡಿದೆ. ಆದರೆ ಭಾರತ 2025ಕ್ಕೆ ಕ್ಷಯರೋಗ ಮುಕ್ತ ದೇಶವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಕೇವಲ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು ಮಾತ್ರ ಶ್ರಮಿಸಿದರೆ ಸಾಲದು. ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.
ಪ್ರಮುಖರಾದ ಶಿವಯೋಗಪ್ಪ ಬಿರಾದಾರ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪುಷ್ಪಾ ಆರ್.ರತ್ನಹೊನ್ನದ್, ರೇಷ್ಮಾ ನಕ್ಕುಂದಿ, ನಾಗೇಶ್ವರಿ ಮುಗಳಿವಾಡಿ, ಗಂಗಾಜ್ಯೋತಿ ಗಂಜಿ, ಮಂಗಲಾ ಚಂದಾಪುರೆ, ಚಂದಮ್ಮ ಮರಾಠ, ಅರ್ಚನಾ ಸಿಂಗೆ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ನಾಗಮ್ಮ ಚಿಂಚೋಳಿ ಸೇರಿದಂತೆ ಇನ್ನಿತರರು ಇದ್ದರು.