ಗ್ಯಾರಂಟಿ ಜಾರಿಗೆ ನಾಳೆ ಸಂಪುಟ ಸಭೆ

ಬೆಂಗಳೂರು,ಜೂ.೧:ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಂಬಂಧ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಪಕ್ಷ ಚುನಾವಣಾ ಹೊತ್ತಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ೨ ಸಾವಿರ ನೀಡುವ ಗೃಹ ಲಕ್ಷ್ಮಿ ಯೋಜನೆ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ, ಪ್ರತಿಕುಟುಂಬಕ್ಕೆ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಅನ್ನಭಾಗ್ಯ ಅಡಿ ಪ್ರತಿಯೊಬ್ಬರಿಗೂ ೧೦ ಕೆಜಿ ಉಚಿತ ಅಕ್ಕಿ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಗ್ಯಾರಂಟಿ ಯಫಜನೆಗಳ ಅನುಷ್ಠಾನ ಸಂಬಂಧ ಕಳೆದ ೪ ದಿನಗಳಿಂದ ಅಧಿಕಾರಿಗಳ ಜತೆ ಹಾಗೂ ಸಚಿವರ ಜತೆ ಪ್ರತ್ಯೇಕ ಸಭೆಗಳಲ್ಲಿ ಸಮಾಲೋಚನೆ ನಡೆಸಿದ್ದರು. ನಾಳೆ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳನ್ನು ಘೋಷಿಸಲಿದ್ದಾರೆ.
ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗುತ್ತದೋ ಇಲ್ಲ ಮೊದಲಿಗೆ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ನಂತರ ಹಂತ ಹಂತವಾಗಿ ಉಳಿದ ಯೋಜನೆಗಳ ಅನುಷ್ಠಾನ ಮಾಡಲಾಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳನ್ನು ಮಾಡಿಯೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ನಾಳೆ ನಡೆಯುವ ಸಂಪುಟ ಸಭೆಯಲ್ಲೂ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡು ಯೋಜನೆಗಳ ಅನುಷ್ಠಾನ ಪ್ರಕಟಿಸುವುದು ಬಹುತೇಕ ಖಚಿತ
ಮೊದಲ ಹಂತದಲ್ಲಿ ಉಚಿತ ಬಸ್ ಪ್ರಯಾಣದ ಶಕ್ತಿ, ಉಚಿತ ವಿದ್ಯುತ್ ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಿ ಉಳಿದ ಯೋಜನೆಗಳಾದ ಯುವ ನಿಧಿ ಮತ್ತು ಗೃಹ ಲಕ್ಷ್ಮಿಯನ್ನು ಮುಂದಿನ ದಿನಗಳಲ್ಲಿ
ಅನುಷ್ಠಾನಗೊಳಿಸುವ ಘೋಷಣೆಯನ್ನು ಮುಖ್ಯಮಂತ್ರಿಗಳು ನಾಳೆ ಸಂಪುಟ ಸಭೆಯ ನಂತರ ಮಾಡಲಿದ್ದಾರೆ ಎಂದು ಹೇಳಲಾಗಿದೆ.