ಗ್ಯಾರಂಟಿ ಯೋಜನೆಗಳ ಜಾರಿಯಿಂದ ಬಿಜೆಪಿ, ಜೆಡಿಎಸ್ ನವರಿಗೆ ಹೊಟ್ಟೆಉರಿ ಶುರು : ಸಿಎಂ ಸಿದ್ದರಾಮಯ್ಯ

ಅಥಣಿ :ಆ.12: ದೇಶದ ಯಾವುದೇ ರಾಜ್ಯದಲ್ಲಿ ಇಂತಹ ಜ್ನಪ್ರಿಯ ಯೋಜನೆಗಳಿಲ್ಲ, ನಮ್ಮ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಗೆ ನಡುಕು ಶುರುವಾಗಿದೆ, ಈ ಯೋಜನೆಯಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಪ್ರತಿ ತಿಂಗಳು ಸುಮಾರು ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತಿವೆ, ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಶುಕ್ರವಾರ ನಡೆದ ಭವ್ಯ ಸಮಾರಂಭದಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಶಕ್ತಿ ಯೋಜನೆಯಡಿ ಇದುವರೆಗೆ ರಾಜ್ಯದ 35 ಕೋಟಿ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ ಆದಾಯ ಕೂಡ ಹೆಚ್ಚಾಗಲಿದೆ.
ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ. ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದರು.
ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ. ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು ಎಂದರು.
ಕಳೆದ ಬಾರಿ ನೀಡಿದ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ ಹಾಗೂ
ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ.
ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಇದೇ ತಿಂಗಳು ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು.
ಬಸವಣ್ಣನವರು ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ. ಆದ್ದರಿಂದ ಜನರು ಮತ್ತೇ ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ
ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರಕಾರ ನುಡಿದಂತೆ ನಡೆಯುತ್ತಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗುವುದು, ಹಾಗೂ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರಗಳ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಹಂತಹಂತವಾಗಿ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಎಂದು ಹೇಳಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪಶುಸಂಗೋಪನೆ ಸಚಿವ ಕೆ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕರಾದ ಭರಮಗೌಡ ಕಾಗೆ, ವಿಶ್ವಾಸ ವೈದ್ಯ, ಜೆ.ಟಿ.ಪಾಟೀಲ, ಮಹೇಂದ್ರ ತಮ್ಮಣ್ಣವರ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಪೂಜಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಬೀದರ್ ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.

ಅಥಣಿ ಮತಕ್ಷೇತ್ರದ ಸಾವಿರಾರು ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಅಥಣಿ ಮತಕ್ಷೇತ್ರಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಕೊಡುಗೆ ಅಪಾರವಾಗಿದೆ. ಸೂಕ್ತ ಸಮಯದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ, ನೀವೆಲ್ಲರೂ ಅವರಿಗೆ ಆಶಿರ್ವಾದ ಮಾಡಿದ್ದಕ್ಕೆ ನಿಮಗೆ ಧನ್ಯವಾದಗಳು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸವದಿ ಅವರ ಸಾಧನೆ ಅಭಿನಂದನಾರ್ಹ.
ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಎಲ್ಲಾ ಬೇಡಿಕೆಗಳನ್ನ ಈಡೇರಿಸಲಾಗುವುದು,
ಗೃಹಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ದೊರೆಯಲಿದೆ, ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಂತೋಷವಾಗಿದ್ದಾರೆ. ಭ್ರಷ್ಟಾಚಾರ, ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ

           ಸಿದ್ದರಾಮಯ್ಯ, ಮುಖ್ಯಮಂತ್ರಿ