ಜನಸಂಖ್ಯೆ ನಿಯಂತ್ರಣ ಅತ್ಯವಶ್ಯಕ : ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

(ಸಂಜೆವಾಣಿ ವಾರ್ತೆ)
ವಿಜಯಪುರ:ಜು.12: ಶರವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಹಾಗೂ ಅಭಿವೃದ್ದಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸುವುದು ಅತ್ಯವಶ್ಯಕವಾಗಿದ್ದು, ಜನಸಂಖ್ಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ನಗರ ಆರೋಗ್ಯ ಕೇಂದ್ರ ನವಬಾಗ ಹಾಗೂ ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜ್ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿಂದು ಹಮ್ಮಿಕೊಂಡ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಜನಸಂಖ್ಯೆ ಹೆಚ್ಚಳಕ್ಕೆ ಅನಕ್ಷರತೆ ಪ್ರಮಾಣದಲ್ಲಿ ಹೆಚ್ಚಳ, ಬೇಗ ಮದುವೆ, ಗಂಡು ಮಗು ಬೇಕೆಂಬ ಹಂಬಲ, ಮೂಡನಂಬಿಕೆ, ಜನನ ಹಾಗೂ ಮರಣಗಳ ನಡುವಿನ ಅಂತರವೇ ಕಾರಣವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯಿಂದ ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದ ಬಿಎಲ್‍ಡಿಇಯ ಡಾ.ತನುಜಾ ಪಟ್ನಾಕರ ಅವರು ಮಾತನಾಡಿ, ಜನಸಂಖ್ಯೆ ನಿಯಂತ್ರಣದಿಂದ ದೇಶಕ್ಕೆ ಮಾರಕವಾಗಿರುವ ಬಡತನ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ ಅವರು, ಜನಸಂಖ್ಯೆ ನಿಯಂತ್ರಣಕ್ಕೆ ಶಾಶ್ವತ ವಿಧಾನವಾದ ಟೋಬೆಕ್ಟಮಿ, ಲೇಪ್ರಸ್ಕೋಪಿಕ್, ಎನ್.ಎಸ್.ವಿ. ಹಾಗೂ ತಾತ್ಕಾಲಿಕ ವಿಧಾನಗಳಾದ ಐ.ಯು.ಡಿ., ಓ.ಪಿ., ನಿರೋಧ, ಚುಚ್ಚು ಮದ್ದುಗಳ ಕುರಿತು ವಿಸ್ತಾರವಾಗಿ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಎಫ್.ಡಬ್ಲೂ ಅಧಿಕಾರಿಗಳಾದ ಡಾ.ರಾಜೇಶ್ವರಿ ಗೊಲಗೇರಿ ಅವರು, ವಿಶ್ವ ಜನಸಂಖ್ಯಾ ದಿನಾಚರಣೆಯನ್ನು 1987ರಿಂದ ಪ್ರತಿ ವರ್ಷ ಜುಲೈ 11ರಂದು ಆಚರಿಸುತ್ತ ಬರಲಾಗುತ್ತಿದೆ. ಈ ವರ್ಷ ‘ಕುಟುಂಬ ಕಲ್ಯಾಣ ನಿಭಾಯಿಸುವ ಜವಾಬ್ದಾರಿ’ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ. ತಾಯಿ ಮತ್ತು ಆರೋಗ್ಯದ ಪೂರ್ಣ ತಯಾರಿ, ಜನಸಂಖ್ಯಾ ತಡೆಯಲು ಇರುವ ಮಾರ್ಗಗಳು, ಜನಸಂಖ್ಯೆಯಿಂದಾಗು ದುಷ್ಪರಿಣಾಮಗಳು, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಸಮಸ್ಯೆಗಳ ಕುರಿತು ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್ ಪ್ರಾಚಾರ್ಯರಾದ ಸಿ.ಬಿ.ನಾಟೀಕರ ಅವರು ಮಾತನಾಡಿದರು. ಡಾ.ಜೈಬುನ್ನಿಸಾ ಬೀಳಗಿ, ಡಾ.ಕವಿತಾ ದೊಡಮನಿ, ಡಾ.ಪಿ.ಎ.ಹಿಟ್ನಳ್ಳಿ, ಜಿ.ಎಂ.ಕೋಲೂರ, ಬಿ.ಪಿ.ಜಕ್ಕನಗೌಡರ, ಗುರುಪುತ್ರ, ಎಸ್.ಎಂ.ಕುಂಬಾರ, ಆರ್.ಎಂ.ಅರಕೇರಿ ಸೇರಿದಂತೆ ವಿದ್ಯಾರ್ಥಿಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಜನಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಕುಮಾರ ಯರಗಲ್ ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜನಜಾಗೃತಿ ರ್ಯಾಲಿಯು ಗಾಂಧಿವೃತ್ತದ ಮಾರ್ಗವಾಗಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್‍ವರೆಗೆ ಸಂಚರಿಸಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.