
ಸಂಜೆವಾಣಿ ವಾರ್ತೆ
ಕೊಟ್ಟೂರು, ಮಾ.14: ವಿಜಯನಗರ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಡಾ.ರಂಗನಾಥ್ ಅಚರು ಸೋಮವಾರ ಕೊಟ್ಟೂರು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಕಾಮಗಾರಿಗಳನ್ನು ಸರಿಯಾದ ರೀತಿಯಲ್ಲಿ ಕೈಗೊಳ್ಳಲಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿದ ಅವರು, ಕಾಮಗಾರಿಗಳನ್ನು ಉತ್ತಮವಾಗಿ ನಿರ್ವಹಿಸಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರುಗಳಿಗೆ ಸೂಚಿಸಿದರು.
ಕಾಮಗಾರಿಗಳ ಕಡತ ಪರಿಶೀಲನೆ:
ನರೇಗಾದಡಿ ಕೈಗೊಂಡಿರುವ ಅಮೃತ ಸರೋವರ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕೈಗೊಂಡಿರುವ ಬೂದು ನೀರು ನಿರ್ವಹಣೆ ಕಾಮಗಾರಿ ಸೇರಿದಂತೆ ನಾನಾ ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದರು. ಕಡತಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕೆ.ಅಯ್ಯನಹಳ್ಳಿ, ಅಂಬಳಿ, ಅಲಬೂರು, ಕೋಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಈ ವೇಳೆ ಜಿಲ್ಲಾ ಸಹಾಯಕ ಕಾರ್ಯಕ್ರಮ ಸಮನ್ವಯಾಧಿಕಾರಿ ಬಸವರಾಜ್, ತಾಪಂ ಇಒ ಪರಮೇಶ್ವರಪ್ಪ, ಸಹಾಯಕ ನಿರ್ದೇಶಕರಾದ ಎಚ್.ವಿಜಯ್ ಕುಮಾರ್, ತಾಂತ್ರಿಕ ಸಂಯೋಜಕ ಶ್ರೀಕಾಂತ್, ಐಇಸಿ ಸಂಯೋಜಕ ಪ್ರಭುಕುಮಾರ್ ಉಪ್ಪಾರ್, ತಾಂತ್ರಿಕ ಸಹಾಯಕರಾದ ಶ್ರೀಧರ್, ರವಿನಾಯ್ಕ್, ರಾಘವೇಂದ್ರ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.