ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ:ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರಿಕೆ ವಹಿಸಿ

ಕಲಬುರಗಿ,ಮಾ.17: ಬರುವ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲದೋರದಂತೆ ಈಗಿನಿಂದಲೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಸಮಸ್ಯಾತ್ಮಕ ಗ್ರಾಮ, ಪಟ್ಟಣಗಳ ವಾರ್ಡ್ ಪಟ್ಟಿ ಈಗಿನಿಂದಲೆ ಸಿದ್ಧವಾಗಿಟ್ಟುಕೊಳ್ಳಬೇಕು ಎಂದರು.
ಪ್ರತಿ ಗ್ರಾಮ, ಪಟ್ಟಣದ ವಾರ್ಡ್‍ವಾರು ಪ್ರತಿ ದಿನದ ನೀರಿನ ಬಳಕೆ ಕುರಿತು ಮಾಹಿತಿ ಸಂಗ್ರಹಿಸಬೇಕು. ಆಯಾ ತಾಲೂಕಿನಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿ ದಿನ 20 ಹಳ್ಳಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ ಪರಿಶೀಲಿಸಬೇಕು. ನಗರ ಪಟ್ಟಣ ಪ್ರದೇಶದಲ್ಲಿ ಪೌರ ಸಂಸ್ಥೆಗಳ ಮುಖ್ಯಸ್ಥರು ಇದರ ಜವಾಬ್ದಾರಿ ಹೊರಬೇಕು. ಈ ಕುರಿತು 10 ದಿನದಲ್ಲಿ ವರದಿ ಸಲ್ಲಿಸಬೇಕು ಎಂದರು.
ಚರಂಡಿ ನೀರು ಸೇರದಂತೆ ಎಚ್ಚರಿಕೆ ವಹಿಸಬೇಕು:ವಿಶೇಷವಾಗಿ ಕುಡಿಯುವ ನೀರಿನ ಪೈಪ್‍ಲೈನ್‍ಗಳಿಗೆ ಚರಂಡಿ ನೀರು ಸೇರದಂತೆ ಎಚ್ಚರಿಕೆ ವಹಿಸಬೇಕು. ಅಧಿಕಾರಿ-ಸಿಬ್ಬಂದಿಗಳ ನಿಷ್ಕಾಳಜಿಯಿಂದ ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆಯಾದಲ್ಲಿ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಸಮರ್ಪಕ ಕಾರ್ಯನಿರ್ವಹಣೆ ಮಾಡದಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ವಹಿಸುವತೆಯೂ ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಹಜವಾಗಿ ಕಲಬುರಗಿಯಲ್ಲಿ ಅತಿಯಾದ ಬಿಸಿಲು ದಾಖಲಾಗುವ ಕಾರಣ ಬೇಸಿಗೆ ಸಂದರ್ಭದಲ್ಲಿ ಬಿಸಿಲು ಮತ್ತು ಬಿಸಿಗಾಳಿಯಿಂದ ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಅರಿವು ಮೂಡಿಸಬೇಕು ಎಂದು ಸಭೆಯಲ್ಲಿದ್ದ ಡಿ.ಎಚ್.ಓ. ಡಾ.ರಾಜಶೇಖರ್ ಪಾಟೀಲ ಅವರಿಗೆ ಡಿ.ಸಿ. ನಿರ್ದೇಶನ ನೀಡಿದರು.

ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಭುವನೇಶ ಪಾಟೀಲ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್.ರಾಠೋಡ, ಸಹಾಯಕ ಆಯುಕ್ತರಾರ ಮಮತಾ ಕುಮಾರಿ, ಕಾರ್ತಿಕ್ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು ಇದ್ದರು.