
ಸಂಜೆವಾಣಿ ವಾರ್ತೆ
ಗಂಗಾವತಿ, ಫೆ.25: ಖ್ಯಾತ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ ಅವರು ಕೊಪ್ಪಳ ಜಿಲ್ಲಾ ಸ್ವೀಪ್ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು, ಗಂಗಾವತಿ ಪ್ರಾಣೇಶ ಅವರನ್ನು ಫೆ.24 ರಂದು ಭೇಟಿ ನೀಡಿ, ಮುಂಬರಲಿರುವ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ ಕೊಪ್ಪಳ ಜಿಲ್ಲಾ ಸ್ವೀಪ್ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು. ಮುಂಬರುವ 2023ರ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನೂತನ ಮತ್ತು ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಸಲುವಾಗಿ “ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ’’ ಎಂಬ ಧ್ಯೇಯ ವ್ಯಾಖ್ಯೆದಂತೆ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತಿ ಸ್ಥಳಗಳಲ್ಲಿ ವಿ.ವಿ. ಪ್ಯಾಟ್ಗಳ ಮುಖಾಂತರ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆ ಪಾಲ್ಗೊಳ್ಳುವಿಕೆಗಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶಿಸಲಾಗಿದೆ ಎಂದು ಸಿಇಓ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿಗಳಾದ ಸಮೀರ ಮುಲ್ಲಾ, ಯೋಜನಾ ನಿರ್ದೇಶಕರಾದ ಪಿ.ಕೃಷ್ಣಮೂರ್ತಿ, ಜಿಲ್ಲಾ ಐಇಸಿ ಸಂಯೋಜಕರಾದ ಶ್ರೀನಿವಾಸ ಚಿತ್ರಗಾರ ಹಾಗೂ ಇತರರು ಇದ್ದರು.