
ವಿಜಯಪುರ: ಫೆ.28:ಜಿಲ್ಲೆಯಾದ್ಯಂತ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 09 ರಿಂದ ಮಾರ್ಚ್ 29ರವರೆಗೆ 56 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜರುಗಿದ ದ್ವೀತಿಯ ಪಿಯುಸಿ ಪರೀಕ್ಷೆ-2023ರ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆಗೆ ಒಟ್ಟು 32,268 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 30178 ಅಭ್ಯರ್ಥಿಗಳು ಪ್ರಸಕ್ತ ಸಾಲಿಗೆ ಹಾಗೂ 1140 ಅಭ್ಯರ್ಥಿಗಳು ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ. ಜಿಲ್ಲೆಯಲ್ಲಿ 06 ಸರಕಾರಿ ಪರೀಕ್ಷಾ ಕೇಂದ್ರ ಹಾಗೂ 32 ಖಾಸಗಿ ಅನುದಾನಿತ ಮತ್ತು 18 ಖಾಸಗಿ ಅನುದಾನ ರಹಿತ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 56 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ನಗರ ಪ್ರದೇಶದಲ್ಲಿ 34 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದ್ದಲ್ಲಿ ಈ ಬಾರಿ 3 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ತಾಲೂಕಾವಾರು ಪರೀಕ್ಷಾ ಕೇಂದ್ರಗಳು : ಆಲಮೇಲ ತಾಲೂಕಿನಲ್ಲಿ -02, ಬಬಲೇಶ್ವರ-01, ಬಸವನಬಾಗೇವಾಡಿ-04, ಚಡಚಣ-02, ದೇವರಹಿಪ್ಪರಗಿ-02, ಇಂಡಿ-07, ಕೊಲ್ಹಾರ-01, ಮುದ್ದೇಬಿಹಾಳ-05, ನಿಡಗುಂದಿ-02, ಸಿಂದಗಿ-05, ತಾಳಿಕೋಟೆ-05, ತಿಕೋಟಾ-02, ವಿಜಯಪುರ ನಗರ-15 ಹಾಗೂ ಗ್ರಾಮೀಣ-03 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ವಿದ್ಯುತ್ ಸೌಕರ್ಯ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭುತ ಸೌಲಭ್ಯಗಳ ಕುರಿತು ಮುಂಚಿತವಾಗಿ ಪರಿಶೀಲನೆ ಮಾಡಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷೆಗಳು ಅತಿ ಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ, ನಿಗದಿತ ಮಾರ್ಗದಲ್ಲಿ ಚಲಿಸಿ, ನಿಖರ ಸಮಯಕ್ಕೆ ತಲುಪಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗುರುತಿನ ಚೀಟಿ ನೀಡಬೇಕು. ಒಂದು ಕೊಠಡಿಯಲ್ಲಿ ಕನಿಷ್ಠ 24 ಗರಿಷ್ಠ 30 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಕಲ್ಪಿಸಬೇಕು ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಪರೀಕ್ಷೆಯ ನಿಗದಿತ ಸಮಯಕ್ಕೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆ ಪತ್ರಿಕೆ ಸ್ವೀಕರಿಸುವ ತೆರೆಯುವ ಮತ್ತು ವಿತರಿಸುವ ಎಲ್ಲ ಪ್ರಕ್ರಿಯೆಗಳು ಸಿಸಿಟಿವಿ ಕಣ್ಗಾವಲಿನಲ್ಲಿರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಪ್ರಶ್ನೆ ಪತ್ರಿಕೆ ಸೆಂಟರ್ ಕೋಡ್, ದಿನಾಂಕ, ಸೀಲ್ ಪ್ಯಾಕಿಂಗ್ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಕೊಠಡಿಗಳಿಗೆ ಸಿಸಿಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಬೇಕು. ನಿಯೋಜಿತ ಸಿಬ್ಬಂದಿ ಹೊರತುಪಡಿಸಿ, ಬೇರೆಯವರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಪ್ರಮಾಣ ಸರಿಯಾಗಿ ಪರಿಶೀಲಿಸಿ ಖಚಿತಪಡಿಸಿಕೊಂಡ ನಂತರ ವಿತರಿಸಬೇಕು. ವ್ಯತ್ಯಾಸ ಕಂಡುಬಂದಲ್ಲಿ ಕೂಡಲೇ ಮುಖ್ಯ ಅಧೀಕ್ಷಕರಿಗೆ ಮಾಹಿತಿ ಒದಗಿಸುವಂತೆ ತಿಳಿಸಿದ ಅವರು, ಕೊಠಡಿ ಮೇಲ್ವಿಚಾರಕರು ಅತ್ಯಂತ ಎಚ್ಚರಿಕೆಯಿಂದ, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಜರುಗಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕ ರಾಜಗೋಪಾಲ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎನ್.ಬಗಲಿ, ಡಿವೈಎಸ್ಪಿ ಸಿದ್ದೇಶ್ವರ, ಜಿಲ್ಲೆಯ ಎಲ್ಲ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಪ್ರಶ್ನೆ ಪತ್ರಿಕೆ ವಿತರಣಾ ತಂಡದ ಪ್ರಾಚಾರ್ಯರು ಹಾಗೂ ಉಪನ್ಯಾಸಕರು, ಪರೀಕ್ಷಾ ಉಪ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.