ಬೆಂಗಳೂರು,ಜು.೨೨-ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲಿ ಲಕ್ಷಾಂತರ ಮೌಲ್ಯದ ಟೊಮೆಟೋ ತುಂಬಿದ್ದ ಗೂಡ್ಸ್ ವಾಹನವನ್ನೇ ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ದಂಪತಿಯನ್ನು ಆರ್ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಬಂಧಿತ ದಂಪತಿಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿ ಪರಾರಿಯಾಗಿರುವ ರಾಕಿ, ಕುಮಾರ್, ಮಹೇಶ್ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ ಎಂದು ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.ಕಳೆದ ಜುಲೈ ೮ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ ೨೫೦ಕ್ಕೂ ಹೆಚ್ಚು ಕೆಜಿಯಷ್ಟು ಟೊಮೆಟೋವನ್ನು ಕೋಲಾರಕ್ಕೆ ಕೊಂಡೊಯ್ಯುತ್ತಿದ್ದರು.ಈ ವೇಳೆ ಆರ್?ಎಂಸಿ ಯಾರ್ಡ್ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು ತಮ್ಮ ಕಾರಿಗೆ ನಿಮ್ಮ ವಾಹನ ಡಿಕ್ಕಿಯಾಗಿದೆ ಎಂದು ಬಲವಂತದಿಂದ ಗೂಡ್ಸ್ ವಾಹನ ನಿಲ್ಲಿಸಿ ಚಾಲಕ ಹಾಗೂ ರೈತನ ಮೇಲೆ ಹಲ್ಲೆ ನಡೆಸಿದ್ದರು.ಬಳಿಕ ಗಾಡಿಯಲ್ಲಿದ್ದ ಟೊಮೆಟೋ ನೋಡಿ ಕಳ್ಳತನದ ಸಂಚು ರೂಪಿಸಿದ್ದರು. ಚಾಲಕ ಹಾಗೂ ರೈತನನ್ನು ಕೂರಿಸಿಕೊಂಡು ಹೋಗಿ ಚಿಕ್ಕಜಾಲ ಬಳಿ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಚೆನ್ನೈಗೆ ಪರಾರಿಯಾಗಿ ಅಲ್ಲಿನ ಮಾರುಕಟ್ಟೆಯಲ್ಲಿ ಟೊಮೆಟೊ ಮಾರಾಟ ಮಾಡಿದ್ದರು.
ಬಳಿಕ ಖಾಲಿ ವಾಹನ ತಂದು ಪೀಣ್ಯ ಬಳಿ ನಿಲ್ಲಿಸಿ, ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಪರಾರಿಯಾಗಿದ್ದರು. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆಯನ್ನು ನಡೆಸಿದ ಆರ್?ಎಂಸಿ ಯಾರ್ಡ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ಶೋಧ ಮುಂದುವರೆದಿದೆ ಎಂದು ತಿಳಿಸಿದ್ದಾರೆ.