ತಂಬಾಕು ರಹಿತ ಜೀವನ ಅಗತ್ಯ : ಡಾ.ಕೇಶ್ವಾರ

ಕಲಬುರಗಿ:ಜೂ.1: ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ ಅಗತ್ಯವಾಗಿದೆ. ಅದರಲ್ಲಿಯೂ ಯುವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ. ಇಂತಹ ಶಕ್ತಿಗಳು ತಂಬಾಕುಯುಕ್ತ ವಸ್ತುಗಳ ವ್ಯಸನಿಗಳಾಗಿ, ಅದಕ್ಕೆ ಬಲಿಯಾಗುತ್ತಿದ್ದಾರೆ. ಜೀವನವನ್ನು ಆಯ್ಕೆ ಮಾಡಿಕೊಳ್ಳಬೇಕೆ ಹೊರತು, ತಂಬಾಕನಲ್ಲ. ತಂಬಾಕು ರಹಿತ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಬುಧವಾರ ಜರುಗಿದ ‘ವಿಶ್ವ ತಂಬಾಕು ರಹಿತ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.
ತಂಬಾಕು ಹಾಗೂ ಅದರ ಉತ್ಪನ್ನಗಳು, ಗುಟಕಾದಿಂದ ಕ್ಯಾನ್ಸರ್ ರೋಗ ಉಂಟಾಗುತ್ತದೆ. ಅನ್ನನಾಳಕ್ಕೆ ಆಸಿಡ್ ಸುರಿದು, ಹೊಟ್ಟೆ ನೋವು, ಗಂಟಲು ಕ್ಯಾನ್ಸರ್, ಪಾರ್ಕಿನಸನ್ ರೋಗ, ನಪುಂಸತತ್ವದಂತಹ ರೋಗಗಳು ಉಂಟಾಗುತ್ತವೆ. ಗುಟಕಾ ಸೇವಿಸುವುದರಿಂದ ಬಾಯಿಯ ಲೋಳೆಪರೆಯು ಗಡುಸಾಗಿ, ಬಾಯಿಯ ಚಟುವಟಿಕೆಗಳಿಗೆ ಅಡ್ಡಿ ಉಂಟಾಗಿ, ಕೊನೆಗೆ ಅದರ ಚಟುವಟಿಕೆ ಸ್ಥಗಿತಗೊಳಿಸುತ್ತದೆ. ಇದರಲ್ಲಿರುವ ಮೆಂಥೋಲ್ ಅಂಶ ಬಾಯಿಯ ಕ್ಯಾನ್ಸರ್‍ಗೆ ಕಾರಣವಾಗುತ್ತದೆ. ಅನ್ನ ನಾಳದಲ್ಲಿ ಹುಣ್ಣಾಗುವುದು, ಆಹಾರ ಸೇವಿಸಿದರೆ ವಾಂತಿಯಾಗುವುದು ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪುಷ್ಪಾ ಆರ್.ರತ್ನಹೊನ್ನದ್, ಗಂಗಾಜ್ಯೋತಿ ಗಂಜಿ, ಲಕ್ಷ್ಮೀ ಮೈಲಾರಿ, ಮಂಗಲಾ ಚಂದಾಪುರೆ, ಚಂದಮ್ಮ ಮರಾಠಾ, ರೇಶ್ಮಾ ನಕ್ಕುಂದಿ, ಅರ್ಚನಾ ಸಿಂಗೆ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ನಾಗಮ್ಮ ಚಿಂಚೋಳಿ ಸೇರಿದಂತೆ ಇನ್ನಿತರರು ಇದ್ದರು.