
ಸಂಜೆವಾಣಿ ವಾರ್ತೆ
ದಾವಣಗೆರೆ. ಆ.೩೧; ಕರ್ನಾಟಕದಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಕಾವೇರಿ ಜಲಾನಯನದ ಜಲಾಶಯಗಳು ಭರ್ತಿಯಾಗದೆ ಸಂಕಷ್ಟ ಎದುರಾಗಿದೆ. ಇಂತಹ ಸಮಯದಲ್ಲಿ
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಈ ವೇಳೆ ಪ್ರತಿಭಟನೆ ಉದ್ದೇಶಿಸಿ ವಿಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ಮಾತನಾಡಿಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯದೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನವಿದೆ ಎಂಬ ಕಾರಣ ಮುಂದಿಟ್ಟುಕೊಂಡು ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ಸ್ ನೀರು ಹರಿಸುತ್ತಿರುವುದು ಖಂಡನೀಯ, ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮೊರೆ ಹೋಗುವುದನ್ನು ಬಿಟ್ಟು ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಳೆ ಕೊರತೆಯಾದ ಈ ವರ್ಷದಲ್ಲಿ ನೆರವಿಗೆ ಬರುವಂತೆ ಹಾಗೂ ಸಂಕಷ್ಟದ ಸೂತ್ರವನ್ನು ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಿತ್ತು. ರಾಜ್ಯದ ಎಲ್ಲ ಶಾಸಕರು, ಸಂಸದರು ನಿಯೋಗ ತೆರಳಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಆಗ್ರಹಪಡಿಸಬೇಕಾಗಿತ್ತು. ಹಾಗೆಯೇ ಮಳೆ ಸರಿಯಾಗಿ ಬರದ ಇಂತಹ ಸಮಯದಲ್ಲಿ ನಾವು ಭಾರತೀಯ ಒಕ್ಕೂಟದಲ್ಲಿರುವ ರಾಜ್ಯಗಳೆಂದು ತಿಳಿದುಕೊಳ್ಳದೆ ನೀರಿಗಾಗಿ ಒತ್ತಾಯಿಸುತ್ತಿರುವ ತಮಿಳುನಾಡು ಸರ್ಕಾರಕ್ಕೆ ಕೇಂದ್ರ ಸರ್ಕಾರ ಕಿವಿಹಿಂಡಿ ಮನವರಿಕೆ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕುವುದನ್ನು ಬಿಟ್ಟು ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ನಿತ್ಯ 5000 ಕ್ಯೂಸೆಕ್ಸ್ ನೀರನ್ನು 10 ದಿನ ಬಿಟ್ಟರೆ ರೈತರ ಬೆಳೆಗೆ ನೀರು ಸಿಗುವುದಿರಲಿ, ಕುಡಿಯಲು ಸಹ ನೀರು ಸಿಗದಿರುವ ಸಾಧ್ಯತೆಗಳಿವೆ ಎಂಬುದನ್ನು ರಾಜ್ಯ ಸರ್ಕಾರ ಮನಗಾಣಬೇಕಾಗಿದೆ.ಆದ್ದರಿಂದ ಈ ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ದಯಾನಂದ, ರಫಿ,ಅಮ್ಜದ್ ಅಲಿ,ರಮೇಶ್,ನಾಗರಾಜ್ ಕುಲಕರ್ಣಿ,ಹುಲಿಗೆಪ್ಪ,ಎಂ.ದರ್ಶನ್,ವಿನಯ್ ಕುಲಕರ್ಣಿ,ಎಸ್.ಸಿದ್ದೇಶ್ ಮತ್ತಿತರರಿದ್ದರು.