ದೇಶದ ಅಭಿವೃದ್ಧಿಯೇ ಬಿಜೆಪಿಯ ಬದ್ಧತೆ

ಮೈಸೂರು: ಏ.28:- ರಾಜ್ಯದ ವಿಕಾಸ, ದೇಶದ ಅಭಿವೃದ್ದಿ ಬಿಜೆಪಿಯ ಬದ್ಧತೆಯಾಗಿದ್ದು, ಕೇಂದ್ರ-ರಾಜ್ಯಗಳ ಸಾಧನೆ, ಸಂಘಟನೆಯ ಆಧಾರದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮೈಸೂರು ಭಾಗದಲ್ಲಿ ಪಕ್ಷ ಅತ್ಯಧಿಕ ಸ್ಥಾನ ಗೆಲ್ಲಲಿದೆ. ಕರ್ನಾಟಕ ಮತ್ತು ದೇಶದ ಹಿತದಿಂದ ಮತ್ತೆ ಡಬಲ್ ಎಂಜಿನ್ ಸರಕಾರ ಕರ್ನಾಟಕದಲ್ಲಿ ರಚನೆ ಆಗಬೇಕು. ಕರ್ನಾಟಕದ ವಿಕಾಸ ಮತ್ತು ದೇಶದ ಅಭಿವೃದ್ಧಿ ಪರಸ್ಪರ ಜೋಡಿಸಿಕೊಂಡಿವೆ ಎಂದರು.
ದೇಶ-ರಾಜ್ಯದಲ್ಲಿ ಪ್ರಧಾನಿ ಮೋದಿಜಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಡಿಮೆ ಅವಧಿಯಲ್ಲಿ ದಾಖಲೆ ಪ್ರಮಾಣದ ಕೆಲಸಗಳು ಆಗಿವೆ. 2 ಲಕ್ಷ ರೈತರಿಗೆ ಭ್ರಷ್ಟಾಚಾರ ರಹಿತವಾಗಿ ಕಿಸಾನ್ ಸಮ್ಮಾನ್ ನಿಧಿ ಲಭಿಸುತ್ತಿದೆ. 4 ಲಕ್ಷ ಶೌಚಾಲಯ ನಿರ್ಮಾಣ, ಮನೆಮನೆಗೆ ನಲ್ಲಿ ನೀರು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ನಿರ್ಮಾಣ, ರಿಂಗ್ ರಸ್ತೆ ಸೇರಿ ಅನೇಕ ಅಭಿವೃದ್ಧಿ ಮಾಡಲಾಗಿದೆ. ಸೆಮಿಕಂಡಕ್ಟರ್ ಕಾರ್ಖಾನೆ ಮೂಲಕ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಸಂಘಟನೆ ಆಧಾರಿತ ಪಕ್ಷ:
ಬಿಜೆಪಿ ಕಾರ್ಯಕರ್ತ ಮತ್ತು ಸಂಘಟನೆ ಆಧರಿತ ಪಕ್ಷ. 4 ಬಾರಿ ಶಾಸಕರಾಗಿದ್ದ ರಾಮದಾಸ್ ಅವರು ಹೊಸಬರಿಗೆ ಅವಕಾಶ ನೀಡಿದ್ದು, ಹೆಚ್ಚು ಮತಗಳ ಅಂತರದಿಂದ ಹೊಸ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಇದನ್ನು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿ ದಂಗೆ: ಕಾಂಗ್ರೆಸ್ ರಾಜ್ಯದಲ್ಲಿ ಒಡೆದ ಮನೆಯಾಗಿದೆ. ವ್ಯಾಪಾರ, ವ್ಯವಹಾರ, ಅಭಿವೃದ್ಧಿ ವಿಚಾರದಲ್ಲಿ ಗಣನೀಯ ಸಾಧನೆ ಬಿಜೆಪಿ ಸರಕಾರದ್ದು. ಆದರೆ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಋಣಾತ್ಮಕ ಪರಿಸ್ಥಿತಿ ಇತ್ತು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಪಿಎಫ್‍ಐ ಜಾಲ ವಿಸ್ತೃತವಾಗಿತ್ತು. ದಂಗೆ, ಹಿಂದೂ ಹತ್ಯೆ ನಿರಂತರವಾಗಿತ್ತು. ಸಿದ್ದರಾಮಯ್ಯ ಅವಧಿಯಲ್ಲಿ ಇಂಥ ಸ್ಥಿತಿ ಇತ್ತು. ನಮ್ಮ ಸರಕಾರ ಬಂದಾಗ ಅಭಿವೃದ್ಧಿ ಕಾರ್ಯ ವೇಗ ಪಡೆಯಿತು. ಯಡಿಯೂರಪ್ಪ ಅವರ ಸರಕಾರ ಗೋಹತ್ಯೆ ನಿಷೇಧಿಸಿತು. ಕೇಂದ್ರ ಸರಕಾರ ಪಿಎಫ್‍ಐ ನಿಷೇಧಿಸಿತು. ಕಾಂಗ್ರೆಸ್ ತುಷ್ಟೀಕರಣ ನೀತಿ ತನ್ನದಾಗಿಸಿಕೊಂಡಿತ್ತು. ಆದರೆ, ಬಿಜೆಪಿ ಎಲ್ಲರ ಅಭಿವೃದ್ಧಿಗೆ ಗಮನ ಕೊಟ್ಟಿದೆ ಎಂದು ತಿಳಿಸಿದರು.
ಸರ್ವರಿಗೂ ಸಾಮಾಜಿಕ ನ್ಯಾಯ: ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಆಡಳಿತದಲ್ಲಿದ್ದರೂ ಸಾಮಾಜಿಕ ನ್ಯಾಯ ನೀಡಲು ಗಮನ ಕೊಡಲಿಲ್ಲ. ಬಿಜೆಪಿ ಸರಕಾರ ಎಸ್‍ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಸ್‍ಸಿ, ಎಸ್‍ಟಿಗೆ ಅವಮಾನ ಮಾಡುತ್ತಿತ್ತು. ಆದರೆ, ನಮ್ಮ ಸರಕಾರದ್ದು ಕೇವಲ ಘೋಷಣೆಯಲ್ಲ. ಅದು ಅನುಷ್ಠಾನಕ್ಕೆ ಬಂದಿದೆ. ಮೀಸಲಾತಿ ಜಾರಿ ಸಂಬಂಧ ನ್ಯಾಯಾಲಯಕ್ಕೆ ಅಫಿಡವಿಟ್ ಸಹ ಸಲ್ಲಿಸಲಾಗಿದೆ ಎಂದರು.
ಯಾರ ಮೀಸಲಾತಿ ಕಿತ್ತುಕೊಳ್ಳುತ್ತೀರಿ: ಮುಸ್ಲಿಮರಿಗೆ ಅಸಾಂವಿಧಾನಿಕ ರೀತಿಯಲ್ಲಿ ಮೀಸಲಾತಿ ಕೊಡಲಾಗಿತ್ತು. ಅದನ್ನು ರದ್ದು ಮಾಡಿ, ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಶೇ.2ರಷ್ಟು ಮೀಸಲಾತಿ ಕೊಡಲಾಗಿದೆ. ಒಳ ಮೀಸಲಾತಿ ಪ್ರಕಟಿಸಿದ್ದೇವೆ. ಕಾಂಗ್ರೆಸ್ ಮುಸ್ಲಿಮರಿಗೆ ಮತ್ತೆ ಮೀಸಲಾತಿ ಕೊಡುವ ಮಾತನಾಡುತ್ತಿದೆ. ಯಾರ ಮೀಸಲಾತಿ ರದ್ದು ಮಾಡಿ ನೀವು ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೀರಿ ಎಂದು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಶಾಸಕ ಎಸ್.ಎ.ರಾಮದಾಸ್, ಜಿಲ್ಲಾ ಕಾರ್ಯಾಧ್ಯಕ್ಷ ಗಿರಿಧರ್, ಮುಖಂಡರಾದ ರಘು ಕೌಟಿಲ್ಯ, ವಸಂತಕುಮಾರ್, ಮಹೇಶ್(ಕೇಬಲ್) ಸೇರಿದಂತೆ ಹಲವರು ಇದ್ದರು.