
ಕಲಬುರಗಿ:ಮೇ.3:ಯುವಜನತೆ ತಮ್ಮ ಮುಂದಿನ ಭವಿಷ್ಯ ಹಾಗೂ ದೇಶದ ಏಳಿಗೆಯತ್ತ ಗಮನ ಹರಿಸಿ ಮತ ಚಲಾವಣೆ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದು ಉಪನ್ಯಾಸಕ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರು ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಎಂಬ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ನಾಗರಿಕನು ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆಮಾಡಲು ಇರುವ ವ್ಯವಸ್ಥೆಯೇ ಮತದಾನ. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳಿಸಲು ಮತದಾನ ಎಂಬ ಪ್ರಕ್ರಿಯೆ ನಡೆಯುತ್ತದೆ. ನಮ್ಮಲ್ಲಿ ಯುವಜನತೆ ಹೆಚ್ಚಾಗಿದ್ದು, ಯುವ ದೇಶವಾಗಿದೆ. ಸುಭದ್ರ ಪ್ರಜಾಪ್ರಭುತ್ವದಲ್ಲಿ ಸರ್ವರೂ ಪಾಲ್ಗೋಂಡು ಉತ್ತಮ ಸಮಾಜ ಕಟ್ಟಲು ಮಹತ್ತರವಾದ ಮತದಾನದ ಹಕ್ಕನ್ನು ಚಲಾಯಿಸಬೇಕು. ನಮ್ಮ ಮತ ಯಾರಿಗೆ ಚಲಾವಣೆಯಾಗಿದೆ ಎಂಬುದನ್ನು ತಿಳಿದುಕೊಳ್ಳಲು ವಿವಿ ಪ್ಯಾಟ್ ಸಹಾಯಕವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.