ಧ್ವನಿ ಸುರುಳಿ ವಿವಾದ: ಮಣಿಕಂಠ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಕಲಬುರಗಿ,ಮೇ.7-ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಇಡೀ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಶ್ರೀಧರ ಬಾಬು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಖರ್ಗೆ ಹಾಗೂ ಅವರ ಇಡೀ ಕುಟುಂಬವನ್ನು ಸಾಫ್ ಮಾಡುವ ಕುರಿತು ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ಆಡಿರುವ ಮಾತುಗಳನ್ನು ಒಳಗೊಂಡ ಆಡಿಯೋ ಗಮನಿಸಿದರೆ ಹಿರಿಯ ನಾಯಕರನ್ನು ಹಾಗೂ ಅವರ ಕುಟುಂಬವನ್ನು ದೈಹಿಕವಾಗಿ ಮುಗಿಸಲು ಸಂಚು ರೂಪಿಸಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದರು.
ಆಡಿಯೋ ಟೇಪ್ ಬಯಲಿಗೆ ಬಂದು 24 ತಾಸು ಕಳೆದರೂ ಪ್ರಧಾನಿ ಮೋದಿ ಈ ಕುರಿತು ಮಾತನಾಡದೆ ಮೌನ ವಹಿಸಿದ್ದಾರೆ. ಸಿಎಂ ಬೊಮ್ಮಾಯಿ ಈ ಕುರಿತು ತನಿಖೆ ಮಾಡುವುದಾಗಿ ಹೇಳಿದ್ದಾರೆ. ಈ ವಿಷಯವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.
ಬಿಜೆಪಿ ಸೋಲಿನ ಭೀತಿಯಿಂದಾಗಿ ಮತ್ತು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಹೆದರಿಸುವ ತಂತ್ರ ಅನುಸರಿಸುತ್ತಿದೆ. ಈ ಹಿಂದೆ ರಾಜಸ್ಥಾನದ ಶಾಸಕರೊಬ್ಬರು ಕೂಡ ಖರ್ಗೆ ಅವರ ಸಾವಿನ ಕುರಿತು ಹೇಳಿಕೆ ನೀಡಿದ್ದರು ಎಂದು ಶ್ರೀಧರ ಬಾಬು ಆರೋಪಿಸಿದರು.
ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಅಜಯ್ ಸಿಂಗ್, ಕೆಪಿಸಿಸಿ ಚುನಾವಣಾ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಶಾಸಕ ಬಿ.ಆರ್. ಪಾಟೀಲ್ ಮಾತನಾಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನೇರ ಹೊಣೆಗಾರರಾಗುತ್ತಾರೆ. ಹಾಗಾಗಿ ಅವರು ಮಾತನಾಡಬೇಕು ಎಂದು ತಾಕೀತು ಮಾಡಿದರು.
ಗೃಹ ಇಲಾಖೆ ಹಾಗೂ ಚುನಾವಣಾ ಆಯೋಗ ಈ ವಿಷಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಈಗಾಗಲೇ ಒಂದು ಕೇಸ್ ದಾಖಲಾಗಿದೆ. ಖರ್ಗೆ ಕುಟುಂಬವನ್ನು ಮುಗಿಸುವ ಮಾತನಾಡಿದ್ದು ನೋಡಿದರೆ ಜನಸಾಮಾನ್ಯರ ಸ್ಥಿತಿ ಏನು ಎಂದು ಚಿತ್ತಾಪುರದ ಜನ ಅರ್ಥ ಮಾಡಿಕೊಳ್ಳಬೇಕು ಎಂದು ಶರಣಪ್ರಕಾಶ್ ಪಾಟೀಲ್ ಆತಂಕ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸುಭಾಷ್ ರಾಠೋಡ್, ಅರವಿಂದ ಚವ್ಹಾಣ ಸೇರಿದಂತೆ ಇತರರಿದ್ದರು.