
ಬೆಂಗಳೂರು,ಮಾ.೧೫- ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ ಕೂಡ ಹೆಚ್ಚಿನ ವಿದ್ಯುತ್ ಪೂರೈಸುವ ಜವಾಬ್ದಾರಿ ಎಸ್ಕಾಂಗಳ ಮೇಲಿದೆ. ಬೇಸಿಗೆಯಲ್ಲಿ ತಡೆರಹಿತ ವಿದ್ಯುತ್ ಪೂರೈಸಲು ರೈತ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು.
ಈ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಅವಧಿಗೆ ಬೇಕಾಗುವ ವಿದ್ಯುತ್ ಬೇಡಿಕೆ ಕುರಿತು ವೈಜ್ಞಾನಿಕವಾಗಿ ಅಧ್ಯಯನ ನಡೆಸಿರುವ ಎಲ್ಲಾ ಎಸ್ಕಾಂಗಳು ಅದಕ್ಕೆ ಬೇಕಾಗಿರುವ ವಿದ್ಯುತ್ ಖರೀದಿ ಮಾಡಿ ಗ್ರಾಹಕರಿಗೆ ಪೂರೈಸಲು ನಿರ್ಧರಿಸಿವೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಈ ಮೂರು ತಿಂಗಳ ಅವಧಿಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಲಿದ್ದು, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ಎಲ್ಲಾ ಎಸ್ಕಾಂಗಳು ನಿರ್ಧಾರ ಕೈಗೊಂಡಿವೆ.
ಬೇಸಿಗೆ ಕಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲು ಇಂಧನ ಇಲಾಖೆಯು ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳಿಗೆ ನಿರ್ದೇಶನ ನೀಡಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.