
ಧಾರವಾಡ, ಆ.26: ಜಿಲ್ಲೆಯ ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿμÉೀಧಿಸಿದೆ. ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ಯ ಅವಳಿ ನಗರ ಹಾಗೂ ಜಿಲ್ಲೆಯಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸುವ ತಯಾರಕರ, ಮಾರಾಟಗಾರರ, ಪರಿಸರವಾದಿಗಳ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು.
ಗಣೇಶ ಚತುರ್ಥಿಯಂದು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಸ್ಥಾಪನೆಗೆ ಸರಕಾರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗದರ್ಶಿಸೂತ್ರಗಳನ್ನು ನೀಡಿದೆ. ಪಿಓಪಿ ಗಣಪತಿ ಮೂರ್ತಿಗಳ ಸ್ಥಾಪನೆಗೆ ಸರ್ಕಾರ 2016 ರಲ್ಲಿ ನಿರ್ಬಂಧಿಸಿ ಆದೇಶಿಸಿದೆ. ಆದೇಶ ಉಲ್ಲಂಘಿಸಿ ಪಿಓಪಿ ಗಣಪತಿ ಸ್ಥಾಪಿಸಿದರೆ ಮತ್ತು ಜಲಮೂಲಗಳಲ್ಲಿ ವಿಸರ್ಜಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ರೂ.10 ಸಾವಿರ ದಂಡ ಮತ್ತು ಜೈಲುವಾಸ ವಿಧಿಸಬಹುದಾಗಿದೆ.
ಅವಳಿ ನಗರ ಹಾಗೂ ಜಿಲ್ಲೆಯ ಯಾವುದೇ ಸ್ಥಳದಲ್ಲಿ ಪಿಓಪಿ ಗಣೇಶ ವಿಗ್ರಹಗಳ ದಾಸ್ತಾನು, ಮಾರಾಟ ಕಂಡುಬಂದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಹಾಯವಾಣಿ ಹಾಗೂ ಮಹಾನಗರ ಪಾಲಿಕೆ ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಬಹುದು. ಅಧಿಕಾರಿಗಳ ತಂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತದೆ. ಮತ್ತು ದಾಸ್ತಾನು ಹೊಂದಿರುವ ಪಿಓಪಿ ವಿಗ್ರಹಗಳನ್ನು ಜಪ್ತಿ ಮಾಡಿ, ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಹಬ್ಬ ಆಚರಿಸಬೇಕೆಂದು ಜಿಲ್ಲಾಧಿಕಾರಿ ಹೇಳಿದರು.
ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳೊಂದಿಗೆ ಗಣೇಶ ವಿಗ್ರಹಗಳ ಸಾಗಾಟ ಹಾಗೂ ಮಾರಾಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಪಿಓಪಿ ಗಣೇಶ ವಿಗ್ರಹಗಳು ಜಿಲ್ಲೆಗೆ ಬರದಂತೆ ತಡೆಯಲು ಪೊಲೀಸ್ ಚೇಕ್ಪೋಸ್ಟ್ಗಳಲ್ಲಿ ನಿರಂತರ ನಿಗಾವಹಿಸಬೇಕೆಂದು ಅವರು ತಿಳಿಸಿದರು. ಮತ್ತು ಗಣೇಶ ವಿಗ್ರಹಗಳ ಸ್ಥಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ವಾಹನಗಳನ್ನು ಪರಿವರ್ತನೆ ಮಾಡದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿಗಾವಹಿಸಬೇಕು. ಅನುಮತಿ ಇಲ್ಲದೆ ವಾಹನ ಪರಿವರ್ತನೆ ಮಾಡಿದರೇ ಕಾನೂನು ಪ್ರಕಾರ ಕ್ರಮ ಕೈಗೊಂಡು ವಾಹನ ಜಪ್ತಿ ಮಾಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಸ್ಥಾಪನೆಗೆ ಸಮಿತಿಯವರು ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಮತ್ತು ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸುವ ಜವಾಬ್ದಾರಿ ಸಮಿತಿ ಮೇಲೆ ಇರುತ್ತದೆ. ರಾಸಾಯನಿಕ ಬಣ್ಣ ಬಳಕೆ ಮಾಡಿದ ವಿಗ್ರಹಗಳನ್ನು ಬಳಸಬಾರದು ಮತ್ತು ನಿಗದಿತ ಸ್ಥಳ ಹೊರತುಪಡಿಸಿ ಇತರ ಜಲಮೂಲಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸಬಾರದು ಎಂದು ಹೇಳಿದರು.
ಜನ, ದನ, ಪ್ರಾಣಿ, ಪಕ್ಷಿಗಳು ಕುಡಿಯುವ ನೀರು ಮತ್ತು ನೀರಿನ ಮೂಲಗಳು ಮಲೀನವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ನಾಡಿನಾದ್ಯಾಂತ ಬರದ ಛಾಯೆ ಕಾಣುತ್ತಿರುವದರಿಂದ ಮತ್ತು ನೀರು ಅತ್ಯಮುಲ್ಯವಾಗಿರುವುದರಿಂದ ಪ್ರತಿಯೊಬ್ಬರು ಈ ಕುರಿತು ಕಾಳಜಿ ವಹಿಸುವುದು ಮುಖ್ಯವಾಗಿದೆ ಎಂದು ಅವರು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಶೀಘ್ರವಾಗಿ ಅನುಮತಿ ಪಡೆಯಲು ಮಹಾನಗರ ಪಾಲಿಕೆ ಹಾಗೂ ನಗರ ಪ್ರದೇಶಗಳಲ್ಲಿ ಏಕಗವಾಕ್ಷಿ (ಸಿಂಗಲ್ ವಿಂಡೋ) ಮೂಲಕ ವ್ಯವಸ್ಥೆ ಕಲ್ಪಿಸಲಾಗುವುದು. ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಗಣೇಶ ವಿಸರ್ಜನೆಯ ಸ್ಥಳಗಳನ್ನು ಗುರುತಿಸಿ, ಮುಂಚಿತವಾಗಿಯೇ ನೋಟಿಪಿಕೇಶನ್ ಮಾಡಬೇಕು. ಗಣೇಶ ವಿಸರ್ಜನೆಯ ದಿನಗಳಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮಹಾನಗರ ಪಾಲಿಕೆಯು ಸಾರ್ವಜನಿಕರಿಗೆ ಮೊಬೈಲ್ ಟ್ಯಾಂಕರ್ಗಳ ಸೌಲಭ್ಯ ಕಲ್ಪಿಸಬೇಕು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಮೊಬೈಲ್ ಟ್ಯಾಂಕರ್ ಸಂಚರಿಸುವ ಮಾರ್ಗ, ಸ್ಥಳ ಮತ್ತು ಸಮಯವನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.