
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೧೭- ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಈ ಅಧಿವೇಶನದಲ್ಲೇ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯನ್ನು ಮಂಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯನ್ನು ಮಂಡಿಸುವ ತೀರ್ಮಾನ ಮಾಡಿರುವ ನಿಟ್ಟಿನಲ್ಲಿ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಸಭೆ ನಡೆಸಲಾಯಿತು. ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು. ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರು, ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ನಾವು ಹಿಂದೆ ಮಾತು ಕೊಟ್ಟಂತೆ ಸರ್ಕಾರದ ಮೊದಲ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
ಈ ಸಭೆಯಲ್ಲಿ ಸಚಿವರುಗಳಾದ ಕೃಷ್ಣಬೈರೇಗೌಡ, ಡಾ. ಹೆಚ್.ಸಿ. ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಬಿ. ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ. ತಿಮ್ಮಾಪುರ, ರಾಜ್ಯದ ಅಡ್ಪೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಹುರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಶ್ರೀಧರ ಗಲಿವೀರ, ಇಂದೂದರ ಹೊನ್ನಾಪುರ, ಡಿ.ಕೆ. ಸಾಗರ್, ನಾಗರಾಜು, ಎಂ. ಮುನಿಸ್ವಾಮಿ, ಬಸವರಾಜ ಕೌತಾಳ್, ಎನ್. ವೆಂಕಟೇಶ್, ಎನ್. ಮುನಿಸ್ವಾಮಿ ಸೇರಿದಂತೆ ೩೫ಕ್ಕೂ ಹೆಚ್ಚು ದಲಿತ ಮುಖಂಡರುಗಳು ಭಾಗಿಯಾಗಿದ್ದರು.