
ತುಮಕೂರು, ಸೆ. ೧೬- ರಾಜ್ಯ ಸರ್ಕಾರ ತುಮಕೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳನ್ನಾಗಿ ಹಾಗೂ ಒಂದು ತಾಲ್ಲೂಕನ್ನು ಸಾಧಾರಣ ಬರಪೀಡಿತವೆಂದು ಘೋಷಣೆ ಮಾಡಿದ್ದು, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಸಿರಾ, ತಿಪಟೂರು, ತುರುವೇಕೆರೆ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ತುಮಕೂರು ತಾಲ್ಲೂಕನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ರಾಜ್ಯ ಸರ್ಕಾರವು ಘೋಷಿಸಿದೆ ಎಂದು ತಿಳಿಸಿದರು.
ಬರ ನಿರ್ವಹಣೆಗೆ ಗ್ರಾಮ ಸಹಾಯಕರು ಹಾಗೂ ಕೃಷಿ ಸಹಾಯಕರ ತಂಡ ರಚಿಸಿ ಇದರ ಮೇಲುಸ್ತುವಾರಿಯನ್ನು ಉಪತಹಶೀಲ್ದಾರ್ ಅವರು ನೋಡಿಕೊಳ್ಳಲಿದ್ದಾರೆ. ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಪ್ರತಿ ಹೋಬಳಿಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಾಲ್ಲೂಕುಗಳ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.
ತೀವ್ರ ಬರಪೀಡಿತ ೯ ತಾಲ್ಲೂಕುಗಳಲ್ಲಿ ಶೇ.೮೦ರಷ್ಟು ಮಳೆ ಕೊರತೆಯಾಗಿದ್ದು, ತುಮಕೂರು ತಾಲ್ಲೂಕಿನಲ್ಲಿ ಮಾತ್ರ ಶೇ.೬೫ರಷ್ಟು ಮಳೆ ಕೊರತೆಯಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ೩,೧೪,೬೩೦ ಹೆಕ್ಟೇರ್ನಲ್ಲಿ ೨,೧೨,೬೬೭ ಹೆಕ್ಟೇರ್(ಶೇ.೬೭.೫೯ರಷ್ಟು) ಬಿತ್ತನೆಯಾಗಿದೆ ಎಂದು ಹೇಳಿದರು.
ಮಳೆಯಾಶ್ರಿತ ಬೆಳೆಗೆ ೨ ಹೆಕ್ಟೇರ್ಗೆ ಸೀಮಿತವಾಗಿ ಪ್ರತಿ ಹೆಕ್ಟೇರ್ಗೆ ೮,೫೦೦ ರೂ.ಗಳ ಪರಿಹಾರ ಮೊತ್ತವನ್ನು ನೀಡಲಾಗುವುದು. ಅಂತೆಯೇ ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ೧೭,೦೦೦ ರೂ., ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ಗೆ ೨೨,೫೦೦ ರೂ. ಹಾಗೂ ರೇಷ್ಮೆ ಇಡಿi ಒuಟbeಡಿಡಿಥಿ, ಖಿussಚಿಡಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ೬,೦೦೦ ರೂ. ಮತ್ತು ರೇಷ್ಮೆ ಒugಚಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ೭,೫೦೦ ರೂ. ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮತ್ತು ಕೃಷಿ ಉಪಕರಣಗಳು ಲಭ್ಯವಿದ್ದು, ರೈತರು ಅರೆ ನೀರಾವರಿ ಬೆಳೆಗಳನ್ನು ಬೆಳೆಯುವುದು ಉತ್ತಮವಾಗಿದೆ ಎಂದರು.
ಜಿಲ್ಲೆಯಲ್ಲಿ ೭೦,೦೯,೦೭೦ ಕ್ವಿಂಟಾಲ್ ಒಣ ಮೇವು ಮತ್ತು ೫,೮೦,೬೨೫ ಕ್ವಿಂಟಾಲ್ ಹಸಿ ಮೇವು ಲಭ್ಯವಿದೆ. ಈ ಹಂಗಾಮಿಗೆ ಒಟ್ಟು ೪,೧೭,೬೭೮ ಮೇವು ಮಿನಿ ಕಿಟ್ ಬೇಡಿಕೆ ಇದ್ದು, ಕೊಳವೆ ಬಾವಿ ಹೊಂದಿರುವ ರೈತರನ್ನು ಗುರುತಿಸಿ, ಸದರಿ ಮಿನಿ ಕಿಟ್ಗಳನ್ನು ನೀಡಲು ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ. ಜಿಲ್ಲೆಯ ಸರ್ಕಾರಿ ಗೋಮಾಳಗಳಲ್ಲಿ ಮೇವು ಬೆಳೆಯಲು ರೈತರಿಗೆ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕುಗಳಾಗಲಿ, ಸಂಘಸಂಸ್ಥೆ ಅಥವಾ ಲೇವಾದೇವಿದಾರರಾಗಲಿ ರೈತರಿಂದ ಯಾವುದೇ ರೀತಿಯ ಸಾಲ ವಸೂಲಿಯನ್ನು ಸದ್ಯಕ್ಕೆ ಮಾಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ರೈತರ ಸಹಕಾರಕ್ಕೆ
ಜಿಲ್ಲಾಡಳಿತ ಸಿದ್ದ
ರೈತರು ಬರ ಬಂದಿದೆ ಎಂದು ಯಾರೂ ಎದೆಗುಂದದೆ ತಮ್ಮ ಸಮಸ್ಯೆಗಳನ್ನು ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಗಮನಕ್ಕೆ ತಂದರೆ, ರೈತರಿಗೆ ಸಹಕಾರ ನೀಡಲು ಸದಾ ಸಿದ್ಧರಾಗಿರುತ್ತೇವೆಂದು ತಿಳಿಸಿದರು.
ಜಿಲ್ಲೆಯ ಮಧುಗಿರಿ ತಾಲ್ಲೂಕಿನ ನೀರಕಲ್ಲು, ಹೊಸಕೆರೆ ಮತ್ತು ಕ್ಯಾತಗೊಂಡನಹಳ್ಳಿ ಗ್ರಾಮಗಳಲ್ಲಿ ಹಾಗೂ ತುರುವೇಕೆರೆ ತಾಲ್ಲೂಕಿನ ಸೂಳೆಕೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಪರ್ಯಾಯವಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳಿಗೆ ತುರ್ತು ಕುಡಿಯುವ ನೀರು ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಯೋಜನೆಗಳಾದ ನರೇಗಾ ಯೋಜನೆಗಳನ್ನು ಕನ್ವರ್ಜೆನ್ಸ್ ಆಧಾರದ ಮೇಲೆ ಗ್ರಾಮೀಣ ಭಾಗದ ರೈತರಿಗೆ ೧೦೦ ದಿನಗಳ ಬದಲಾಗಿ ೧೫೦ ದಿನಗಳ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ
ಗೌರಿ-ಗಣೇಶ ಹಬ್ಬದ ನಿಮಿತ್ತ ಜಿಲ್ಲೆಯಲ್ಲಿ ಸಾರ್ವಜನಿಕರು ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಪರಿಸರಕ್ಕೆ ಹಾನಿಯುಂಟಾಗುತ್ತದೆ. ಆದ್ದರಿಂದ ಮಣ್ಣಿನ ಮೂರ್ತಿಗಳನ್ನು ಇಡಬೇಕು ಎಂದು ಮನವಿ ಮಾಡಿದರು.
ನಗರದ ೩೫ ವಾರ್ಡ್ಗಳ ವ್ಯಾಪ್ತಿಯಲ್ಲಿ ೧೫ ಕಡೆ ಗಣಪತಿ ವಿಸರ್ಜನೆಗೆ ಟ್ಯಾಂಕರ್ಗಳ ವ್ಯವಸ್ಥೆ ಮಾಡಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಜಿ. ಪ್ರಭು ಮಾತನಾಡಿ, ಬರಪೀಡಿತ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಮೆಟೀರಿಯಲ್ ಆಧಾರಿತ ಕಾಮಗಾರಿಗಳನ್ನು ಮಾಡುವಂತಿಲ್ಲ. ರೈತರು ತಮ್ಮ ಜಮೀನಿನಲ್ಲಿ ವೈಯುಕ್ತಿಕ ಕಾಮಗಾರಿಗಳನ್ನು ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗ್ರಾಮ ಪಂಚಾಯ್ತಿಯು ೨.೫ ಕೋಟಿಯಷ್ಟು ಕೂಲಿ ಆಧಾರಿತ ಕಾಮಗಾರಿಗಳನ್ನು ಮಾಡಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಉಪಸ್ಥಿತರಿದ್ದರು.