
ಬೆಂಗಳೂರು,ಮೇ.೨೦-ವರುಣರಾಯ ಕಳೆದ ನಾಲ್ಕೈದು ದಿನಗಳಿಂದ ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರಿಗೆ ತಂಪೆರೆಯಲು ಬರುತ್ತಿದ್ದಾನೆ.
ಮೇ ೨೧ ಮತ್ತು ೨೨ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೂಡ ಕೆಲವೆಡೆ ಮಳೆಯಾಗಲಿದೆ.
ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಮಳೆ ಸುರಿಯುತ್ತಿದೆ. ಯಶವಂತಪುರ ಸುತ್ತಮುತ್ತಲ ಪ್ರದೇಶದಲ್ಲೂ ನಿನ್ನೆ ಮಳೆಯಾಗಿದೆ.
ಮುಂದಿನ ಎರಡು ದಿನಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯದಲ್ಲೂ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು ವಾರದಿಂದ ತಾಪಮಾನ ನಿರಂತರವಾಗಿ ಏರುತ್ತಿದೆ. ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರಿನಲ್ಲಿ ಗರಿಷ್ಠ ೩೮ರಿಂದ ೪೦ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗುತ್ತಿರುವುದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ ೪ ಅಥವಾ ನಾಲ್ಕು ದಿನಗಳ ತಡವಾಗಿ ಮುಂಗಾರು ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ
ಜೂನ್ ೬ರ ನಂತರ ರಾಜ್ಯದಲ್ಲಿ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ದೇಶದಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ.