
ಕಲಬುರಗಿ:ಎ.22: ಜಗತ್ತಿನ ಸಕಲ ಜೀವರಾಶಿಗಳ ಅಸ್ತಿತ್ವಕ್ಕೆ ಕಾರಣೀಕತೃವಾದ ಭೂಮಿಯು ಅನೇಕ ಕಾರಣಗಳಿಂದ ಗಂಡಾಂತರಕ್ಕೆ ಸಿಲುಕುವ ಮೂಲಕ ಜೀವರಾಶಿಗಳ ಬದುಕಿಗೆ ಅಪಾಯ ಉಂಟಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ಜೀವಿಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ಭೂಮಿಯ ಸಂರಕ್ಷಣೆ ಮಾಡುವದು ಎಲ್ಲರ ಕರ್ತವ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ.ಪಾಟೀಲ ಹೇಳಿದರು.
ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ಕೊಹಿನೂರ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಜರುಗಿದ ‘ವಿಶ್ವ ಭೂಮಿ ದಿನಾಚರಣೆ’ಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸೂರ್ಯನನ್ನು ಸುತ್ತುತ್ತಿರುವ ಗ್ರಹಗಳಲ್ಲಿ ಭೂಮಿಯು ಮೂರನೇಯದಾಗಿದೆ. ವಾಯು, ನೀರು, ನೆಲ ಹೊಂದಿರುವ, ಜೀವಿಗಳು ವಾಸಿಸಲು ಯೋಗ್ಯವಾಗಿರುವ ಏಕೈಕ ಗ್ರಹ ನಮ್ಮದಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆ, ಮಾನವನ ದುರಾಸೆಯಂತಹ ಕಾರಣಗಳಿಂದ ಭೂಮಿಯು ಮಲಿನವಾಗಿದೆ. ಇದರಿಂದ ಜಾಗತಿಕ ತಾಪಮಾನ ಹೆಚ್ಚಾಗಿ, ಹಸಿರು ಮನೆ ಪರಿಣಾಮ, ಓಝೋನ ಪದರಿನ ನಾಶ, ಕುಡಿಯುವ ನೀರಿನ ಅಭಾವ, ಜೀವ ಸಂಕುಲದ ಮೇಲೆ ದುಷ್ಪರಿಣಾಮ, ಅರಣ್ಯಗಳ ಕ್ಷೀಣತೆ, ಭೂಮಿಯ ಗುಣಮಟ್ಟದ ಪ್ರಮಾಣ ಕಡಿಮೆಯಾಗುತ್ತಿರುವುದು, ಮಳೆಯ ಪ್ರಮಾಣ ಕುಸಿತವಾಗಿರುವದು ಸೇರಿದಂತೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಎಸ್.ಘತ್ತರಗಿ ಮಾತನಾಡಿ, ಎಲ್ಲೆಡೆ ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಪ್ಲಾಸ್ಟಿಕ್, ರಾಸಾಯನಿಕಗಳ ಬಳಕೆ ನಿಷೇದ ಸೇರಿದಂತೆ ಮುಂತಾದ ಕ್ರಮಗಳನ್ನು ಕೈಗೊಂಡು ಭೂಮಿಯ ಸಂರಕ್ಷಣೆ ಮಾಡಬೇಕೆಂದು ನುಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ಪ್ರಮುಖರಾದ ಸಿದ್ದಾರೂಡ ಸರಸಂಬಿ, ಬಾಳಪ್ಪ ಮೈನಾಳ, ಅಂಬರೀಶ್ ವರನಾಳ, ಅಂಬಿಕಾ ಪೂಜಾರಿ ಸೇರಿದಂತೆ ಇನ್ನಿತರರಿದ್ದರು.