
ವಿಜಯಪುರ, ಆ.31: ಮಹಿಳೆಯರ ಆರ್ಥಿಕ ಸಬಲೀಕರಣದ ನಿಟ್ಟಿನಲ್ಲಿ ಇಂದು ಐತಿಹಾಸಿಕ ದಿನವಾಗಿದೆ. ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಮೂಲಕ ದಿಟ್ಟ ಹೆಜ್ಜೆಯನ್ನಿಟ್ಟು ನುಡಿದಂತೆ ನಡೆಯುತ್ತಿದ್ದೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ ಪಾಟೀಲ ಹೇಳಿದರು.
ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮನೆ ಯಜಮಾನಿಗೆ ಮಾಸಿಕ 2,000 ಒದಗಿಸುವ ಗೃಹಲಕ್ಷ್ಮಿ ಯೋಜನೆಗೆ ವಿಜಯಪುರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರವು ನೂರು ದಿನ ಪೂರೈಸುತ್ತಿರುವ ಸಂದರ್ಭದಲ್ಲಿ 4 ಗ್ಯಾರಂಟಿ ಈಡೇರಿಸಿ, ಮಹಿಳಾ ಸಶಕ್ತಿಕರಣಕ್ಕೆ ಒತ್ತು ನೀಡಿದ್ದೇವೆ. ಯುವನಿಧಿ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಇದುವರೆಗೆ 1 ಕೋಟಿ 17 ಲಕ್ಷ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಅನ್ನ-ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ತಲಾ 5 ಕೆ.ಜಿ. ಅಕ್ಕಿ ನೀಡಿದ್ದು, ಉಳಿದ 5 ಕೆ.ಜಿ ಅಕ್ಕಿಯ ಮೊತ್ತ 170 ರೂ. ಪ್ರತಿ ಸದಸ್ಯನಿಗೆ ಪಾವತಿ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಯುವನಿಧಿ ಯೋಜನೆಯು ಡಿಸೆಂಬರ್ನಲ್ಲಿ ಚಾಲನೆಗೊಳ್ಳಲಿದೆ.
ಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಇಂದಿನಿಂದ ಜಿಲ್ಲೆಯ ಎಲ್ಲಾ ನೋಂದಾಯಿಸಿಕೊಂಡಿರುವ ಮನೆ ಯಜಮಾನಿ ಫಲಾನುಭವಿ ಖಾತೆÀಗೆ 2,000 ರೂ.ಜಮೆ ಆಗಲಿದೆ ಎಂದ ಸಚಿವರು, ಜಿಲ್ಲೆಯಲ್ಲಿ ಫಲಾನುಭವಿ ಗುರಿ 5,20,906 ಇದ್ದು, ಪ್ರತಿ ತಿಂಗಳಿಗೆ 103.60 ಕೋಟಿ ರೂ. ಅನುದಾನ ಬೇಕಾಗುತ್ತಿದೆ. ಜಿಲ್ಲೆಯಲ್ಲಿ ಆಗಸ್ಟ್ 28ರವರೆಗೆ 4,29,783 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಶೇ.82.51 ರಷ್ಟು ಸಾಧನೆಯಾಗಿದೆ ಎಂದು ಹೇಳಿದರು. ರಾಜ್ಯದ ಸವಾರ್ಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳಿಗಾಗಿ ಆಯವ್ಯಯದಲ್ಲಿ ಅನುದಾನ ಘೋಷಿಸಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 211 ಗ್ರಾಮ ಪಂಚಾಯತಿ ಹಾಗೂ 15 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 47 ಸ್ಥಳವೂ ಸೇರಿದಂತೆ 258 ಕಡೆ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ರಂಗ ಮಂದಿರದ ಸುತ್ತ ಹಬ್ಬದ ವಾತಾವರಣ ಮನೆ ಮಾಡಿತ್ತು. ಪ್ರವೇಶ ದ್ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಿಹ್ನೆಯ ಸುತ್ತ ನಾನೇ ಯಜಮಾನಿ-ನಾನೇ ನಾಯಕಿ ಎಂದು ರಂಗೋಲಿ ಗಮನ ಸೆಳೆಯಿತು. ಅದರಂತೆ ಮೈಸೂರು ಕಾರ್ಯಕ್ರಮದ ನೇರ ಪ್ರಸಾರ, ಪ್ರತಿಜ್ಞಾ ವಿಧಿ, ಮೈಸೂರಿನಿಂದ ಹಣ ಬಿಡುಗಡೆ ಪ್ರಕ್ರಿಯೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಮಹಾನಗರ ಪಾಲಿಕೆಯ ಆಯುಕ್ತರಾದ ಬದ್ರುದ್ದಿನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.