ರಾಯಚೂರು,ಜ.೨೪- ಮಣಿಪುರದಲ್ಲಿ ಬುಡಕಟ್ಟು ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಣಿಪುರದಲ್ಲಿ ಮೇ ೪ ರಂದು ಮಹಿಳೆಯರ ಮೇಲೆ ದುಷ್ಕರ್ಮಿಗಳ ಗುಂಪು ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಎಫ್.ಐ.ಆರ್. ದಾಖಲಾದರೂ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಮಣಿಪುರು ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭೇಟಿ ಬಚಾವೋ, ಭೇಟಿ ಪಡಾವೋ’ ಎಂಬ ಹೇಳಿಕೆ ಹೆಸರಿಗೆ ಮಾತ್ರ ಸಿಮಿತವಾಗಿದೆ. ಮಣಿಪುರದ ಗಲಭೆ ನಡೆದು ಮೂರು ತಿಂಗಳಾದರೂ ಕೂಡ ಇದುವರೆಗೂ ಮಣಿಪುರಕ್ಕೆ ಭೇಟಿ ನೀಡದೇ ನಡೆದಿರುವಂತ ಅಹಿತಕರ ಘಟನೆಗಳು ಮತ್ತು ಕೋಮುವಾದ ಸಂಘಟನೆಗಳ ಕುರಿತು ಮಾತನಾಡದೇ ಇರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇಂಥ ನೀಚ ಕೃತ್ಯವೆಸಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎನ್.ನರಸಿಂಹಲು, ಎಂ.ಬಾಬು ಹರಿಜನವಾಡ , ಹನುಮೇಶ ಅರೋಲಿ,ಫಕ್ರುದ್ದೀನ್ ಅಲಿ ಅಹ್ಮದ್, ಸೈಯದ್ ವಾಹೀದು ಸೇರಿದಂತೆ ಇತರರು ಉಪಸ್ಥಿತರಿದ್ದರು.