
ಸಂಜೆವಾಣಿ ವಾರ್ತೆ
ಹನೂರು: ಆ.4:- ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ 108 ಅಡಿ ಎತ್ತರದ ಹುಲಿವಾಹನದ ಮಾದಪ್ಪನ ಪ್ರತಿಮೆಯ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ ಶಾಸಕ ಎಂಆರ್ ಮಂಜುನಾಥ್ ಅವರು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಮಾದಪ್ಪನ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಅವರು ಅಧಿಕಾರಿಗಳ ಜೊತೆ ಮಾತನಾಡಿದರು ರಾಜ್ಯದ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟ ಪ್ರಸಿದ್ಧಿ ಪಡೆದಿದೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.
ಮಲೆ ಮಾದೇಶ್ವರ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದ ಅವರು 108 ಅಡಿ ಮಲೆ ಮಹದೇಶ್ವರನ ವಿಗ್ರಹ ಉದ್ಘಾಟನೆಗೊಂಡು ಹಲವಾರು ತಿಂಗಳುಗಳ ಕಳೆದಿದೆ ಆದರೆ ಉಳಿದಿರುವ ಕಾಮಗಾರಿಗಳಿಂದಾಗಿ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ವೀಕ್ಷಣೆ ಮಾಡಲು ಅವಕಾಶ ಇಲ್ಲದೆ ಇರುವುದರಿಂದ ಕೂಡಲೇ ಉಳಿದಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಭಕ್ತರ ಅನುಕೂಲಕ್ಕಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಂತರ 512 ಕೊಠಡಿಗಳ ಕಾಮಗಾರಿಯನ್ನು ಸಹ ಪರಿಶೀಲನೆ ನಡೆಸಿ ರಾಜ್ಯದ ನಾನಾ ಭಾಗಗಳಿಂದ ಜಾತ್ರೆ ಹಾಗೂ ವಿಶೇಷ ಅಮಾವಾಸ್ಯೆ ಹುಣ್ಣಿಮೆ ದಿನಗಳಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಕೊಠಡಿಗಳ ಕೊರತೆ ಇರುವುದರಿಂದ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನಂತರ ದರ್ಶನ ಸಾಲಿನ ಕಾಮಗಾರಿ ಕೊಠಡಿಯನ್ನು ಸಹ ಪರಿಶೀಲನೆ ನಡೆಸಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ವಿಶ್ರಾಂತಿ ಪಡೆದು ಮಾದಪ್ಪನ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಮಾಡುತ್ತಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ದಾಸೋಹ ಭವನ ಅಡುಗೆ ಕೊಠಡಿಗೂ ಸಹ ಬೇಟಿ ನೀಡಿ ಪರಿಶೀಲಿಸಿ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಹಿಂಭಾಗ ಇರುವ ಪ್ಲಾಸ್ಟಿಕ್ ಅನ್ನು ಮುಕ್ತಗೊಳಿಸಿ ಸ್ವಚ್ಛತೆಗೊಳಿಸುವಂತೆ ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ವೀಕ್ಷಣೆಯನ್ನು ಸಹ ಮಾಡುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇದೇವೇಳೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಸಹ ಇದೇ ಸಂಧರ್ಭದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ ಮಲೆ ಮಾದೇಶ್ವರನ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸ್ಥಳದಲ್ಲಿದ್ದ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದ, ಸಾಲೂರು ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು, ಇಂಜಿನಿಯರ್ ಸೆಲ್ವಗಣಪತಿ, ಕುಮಾರ್ ಹಾಗೂ ದೇವಾಲಯದ ಸಿಬ್ಬಂದಿ ವರ್ಗ ಇನ್ನಿತರರು ಹಾಜರಿದ್ದರು.