ಬೆಂಗಳೂರು, ಅ.3- ಕಾವೇರಿ ವಿಚಾರವಾಗಿ ವಿರೋಧ ಪಕ್ಷ ಬಿಜೆಪಿ ಕೇವಲ ರಾಜಕೀಯ ಮಾಡುತ್ತಿದೆ. ಅವರಿಗೆ ರಾಜ್ಯದ ಹಿತದ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅನುಮತಿ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕರ್ನಾಟಕ ತನ್ನ ಜಾಗದಲ್ಲಿ ಆಣೆಕಟ್ಟುಕೊಳ್ಳಲು ಅಡ್ಡಿಪಡಿಸಬೇಡಿ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ರಾಜ್ಯದ ಹಿತಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ. ಅವರಿಗೆ ರಾಜ್ಯದ ಹಿತ ಕಾಯುವ ಬದ್ಧತೆ ಇದ್ದರೆ ಕಾವೇರಿ, ಮಹಾದಾಯಿ ಹಾಗೂ ಕೃಷ್ಣಾ ನದಿ ವಿಚಾರವಾಗಿ ದೆಹಲಿಗೆ ಹೋಗಿ ಕೇಂದ್ರದ ಬಳಿ ಚರ್ಚೆ ಮಾಡಲಿಎಂದು ತಿಳಿಸಿದರು.
ಶಿವಮೊಗ್ಗ ಗಲಭೆಗೆ ಸರ್ಕಾರವೇ ಮುಕ್ತ ಅವಕಾಶ ನೀಡಿದೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು,ಕಾನೂನು ಕೈಗೆತ್ತಿಕೊಳ್ಳುವ ಯಾರೊಬ್ಬರನ್ನು ನಾವು ಸಹಿಸಿಕೊಳ್ಳುವುದಿಲ್ಲ. ಈ ಘಟನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ. ಈ ಘಟನೆ ಹಿಂದೆ ಯಾರೇ ಇದ್ದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರು ಪ್ರಚೋದನೆ ನೀಡುವ, ಕಲ್ಲು ತೂರಾಟ ಮಾಡಲು ಮುಂದಾಗಬಾರದು. ಇದಕ್ಕೆ ಸರ್ಕಾರ ಅವಕಾಶ ನೀಡವುದಿಲ್ಲ. ನಮ್ಮ ರಾಜ್ಯ ಶಾಂತಿಯ ತೋಟವಾಗಿರಬೇಕು. ಕಾನೂನು ಎಲ್ಲರಿಗೂ ಒಂದೇ ಎಂದರು.
ಯಾರೊ ದೂರು ಕೊಟ್ಟಿರುವ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಜೊತೆ ನಾವೆಲ್ಲ ಕೂತು ಚರ್ಚೆ ಮಾಡುತ್ತೇವೆಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.