ಲೋಕಸಭಾ ಚುನಾವಣೆ: ಮನೆ ಮನೆಗೆ ತೆರಳಿ ಪಕ್ಷ ಸಂಘಟನೆ

????????????????????????????????????

ತುಮಕೂರು, ಆ. ೨೯- ಲೋಕಸಭಾ ಚುನಾವಣೆಯಲ್ಲಿ ವರಿಷ್ಠರಿಗೆ ಕೊಟ್ಟಿರುವ ಮಾತಿನಂತೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಪಕ್ಷವನ್ನು ಸಂಘಟಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ತಿಳಿಸಿದರು.
ಹೆಗ್ಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಅಲ್ಪಸಂಖ್ಯಾತರ ಘಟಕದ ವತಿಯಿಂದ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಚುನಾವಣೆ ವೇಳೆಯಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿರುವಂತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿಕೊಂಡು ಇದೀಗ ೧೩೫ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆದ್ದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಾಗಿ ವರಿಷ್ಠರಿಗೆ ಮಾತು ಕೊಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಪ್ರತಿ ಗ್ರಾಮ ಪಂಚಾಯ್ತಿಯ ಮನೆ ಮನೆಗೆ ಪಾದಯಾತ್ರೆಯ ಮೂಲಕ ತೆರಳಿ ಸರ್ಕಾರದ ಯೋಜನೆಗಳನ್ನು ಜನರ ಗಮನಕ್ಕೆ ತಂದು ಪಕ್ಷ ಸಂಘಟಿಸಲಾಗುವುದು ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಶತಾಯಗತಾಯ ಗೆಲ್ಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರ ಸಹಕಾರದಿಂದ ಪ್ರತಿ ಗ್ರಾಮ ಪಂಚಾಯ್ತಿಯ ವಿವಿಧ ಗ್ರಾಮಗಳಿಗೆ ಪಾದಯಾತ್ರೆ ಮೂಲಕ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಸದ್ಬಳಕೆಯಾಗುತ್ತಿವೆ ಎಂಬುದನ್ನು ಸರ್ಕಾರ ಮನವರಿಕೆ ಮಾಡಿ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ, ಗ್ರಾಮ ಪಂಚಾಯಿತಿ ಮಟ್ಟದ ಪ್ರತಿ ಮನೆ ಮನೆಗೂ ಪಾದಯಾತ್ರೆ ಮೂಲಕ ತೆರಳಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಪ್ರೇರೇಪಿಸಿ, ರಾಜ್ಯದಲ್ಲಿ ಸುಮಾರು ೨೦ಕ್ಕೂ ಹೆಚ್ಚು ಲೋಕಸಭಾ ಸದಸ್ಯರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಷಣ್ಮುಖಪ್ಪ ಮಾತನಾಡಿ, ಮುಂಬರುವ ತಾ.ಪಂ., ಜಿ.ಪಂ.ಹಾಗೂ ಲೋಕಸಭಾ ಚುನಾವಣೆಗೆ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ಚುನಾವಣೆಗೆ ಯಾರೇ ನಿಂತರೂ ಜಾತ್ಯಾತೀತವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕೆಂಬ ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ, ಎಲ್ಲರೂ ಪಕ್ಷದ ಸಿದ್ದಾಂತವನ್ನು ಒಪ್ಪಿ ಕೆಲಸ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರುಗಳು ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಹೆಚ್ಚಿನ ಕಾಳಜಿ ವಹಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಜತೆಗೆ, ಗ್ರಾಮಾಂತರ ಕ್ಷೇತ್ರದ ೩೫ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಅಭಿವೃದ್ಧಿ ಯೋಜನೆಗಳನ್ನು ಜನರ ಮುಂದಿಟ್ಟು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಘಟಕದ ಜಿಲ್ಲಾ ಅಧ್ಯಕ್ಷ ನಿಂಗರಾಜು ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾತರು ದಲಿತರು ಹಿಂದುಳಿದ ವರ್ಗದವರು ಸೇರಿದಂತೆ ಶೋಷಿತ ವರ್ಗದವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತ ನೀಡಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದು, ಕಾರ್ಯಕರ್ತರು ಅಧಿಕಾರದಲ್ಲಿರುವ ಸಚಿವರು, ಶಾಸಕರುಗಳನ್ನು ಬಳಸಿಕೊಂಡು ಸಮ ಸಮಾಜದ ಅಭಿವೃದ್ಧಿ ಜತೆಗೆ, ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು, ಜನರನ್ನು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುವಂತೆ ಮನವರಿಕೆ ಮಾಡಬೇಕು ಎಂದರು.
ಸಭೆಯಲ್ಲಿ ಗ್ರಾಮಾಂತರ ತಾಲ್ಲೂಕಿನ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆಂಪಣ್ಣ, ನರಸಿಂಹಮೂರ್ತಿ, ಆಗಳ ಕೋಟೆ ನರಸಿಂಹರಾಜು ಸೇರಿದಂತೆ ಅಲ್ಪಸಂಖ್ಯಾತ ಮುಖಂಡರಾದ ಸೈಯದ್ ದಾದಾಪೀರ್, ನವೀದ್, ಅಜ್ಮಲ್, ಅರಕೆರೆ ಪಂಚಣ್ಣ, ಶಿವನಂಜಪ್ಪ, ಪ್ರಸನ್ನಕುಮಾರ್, ವಿಜಯಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.