
ಕಲಬುರಗಿ.ಮಾ.03: ಪರಿಸರದ ಜೈವಿಕ ವ್ಯವಸ್ಥೆಯ ಸರಪಣಿಯಲ್ಲಿ ಒಂದು ಯಾವುದೇ ಜೀವಿಯ ಸಂತತಿ ನಾಶವಾದರೆ ಅದರ ನೇರ ಪರಿಣಾಮದ ಪರಿಸರದ ಮೇಲಾಗಿ, ಅಸಮತೋಲನೆಯಾಗುತ್ತದೆ. ಆದ್ದರಿಂದ ಸಸ್ಯ ಸಂಪತ್ತು, ಪ್ರಾಣಿ ಸಂಪತ್ತು, ವನ್ಯ ಜೀವಿಗಳ ಸಂರಕ್ಷಣೆ ಮಾಡುವುದರಿಂದ ಪರಿಸರ ಸಮತೋಲನ ಕಾಪಾಡಲು ಸಾಧ್ಯವಿದೆ ಎಂದು ವಲಯ ಅರಣ್ಯಾಧಿಕಾರಿ ರಮೇಶ ಗಾಣಿಗೇರ್ ಅಭಿಮತ ವ್ಯಕ್ತಪಡಿಸಿದರು.
ನಗರದ ಸಾರ್ವಜನಿಕ ಉದ್ಯಾನವನದಲ್ಲಿನ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಜಿಲ್ಲಾ ಕಿರು ಮೃಗಾಲಯ ಮತ್ತು ಮಕ್ಕಳ ಉದ್ಯಾನವನ, ‘ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳು ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜರುಗಿದ ‘ವಿಶ್ವ ವನ್ಯಜೀವಿ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವನ್ಯಜೀವಿಗಳು ಜೀವ ವೈವಿಧ್ಯತೆಯನ್ನು ಕಾಪಾಡುತ್ತವೆ. ಜೀವಿಗಳ ನಾಶಗಳನ್ನು ತಡೆಗಟ್ಟುತ್ತವೆ. ಪ್ರವಾಸೋದ್ಯಮದ ಮೂಲಕ ಆರ್ಥಿಕ ಬೆಳವಣಿಗೆಯಾಗುತ್ತದೆ. ವನೀಕರಣಕ್ಕೆ ಉತ್ತೇಜನಕಾರಿಯಾಗಿವೆ. ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವುನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದರು.
ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ, ಕ.ರಾ.ಪ್ರಾ.ಶಾ.ಶಿ.ಸಂಘದ ರಾಜ್ಯ ಉಪಾಧ್ಯಕ್ಷ ಪರಮೇಶ್ವರ ಬಿ.ದೇಸಾಯಿ ಮಾತನಾಡಿದರು. ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ ಅವರು ಪರಿಸರ ಜಾಗೃತಿ ಗೀತೆಗಳನ್ನು ಹಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಸಂತೋಷಕುಮಾರ ಕೆಂಚಪ್ಪನವರ್ ಮಾರ್ಗದರ್ಶನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಪ್ರಮುಖರಾದ ಶಿವಯೋಗಪ್ಪ ಬಿರಾದಾರ, ದೇವೇಂದ್ರಪ್ಪ ಗಣಮುಖಿ, ಶರಣಬಸಪ್ಪ ನರೋಣಿ, ಉಪವಲಯ ಅರಣ್ಯ ಅಧಿಕಾರಿ ಮಲ್ಲಿಕಾರ್ಜುನ ಎಚ್.ಜಮಾದಾರ, ಕಿರಿಯ ಅಭಿಯಂತರ ವಿಜಯಕುಮಾರ ಪಾಟೀಲ, ಅರಣ್ಯ ರಕ್ಷಕ ಕಾಂತಪ್ಪ ಪೂಜಾರಿ, ಪ್ರಾಣಿ ಪಾಲಕ ಸದಾನಂದ ಶಿರವಾಳ, ಅರಣ್ಯ ವೀಕ್ಷಕಿ ಶಿವಲೀಲಾ ತೆಗನೂರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.