
ಸಂಜೆವಾಣಿ ವಾರ್ತೆ
ಕೊಪ್ಪಳ ಸೇ:15: ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಹಿನ್ನೆಲೆಯಲ್ಲಿ ಪ್ರಸ್ತಕ ವರ್ಷ ವಿಶೇಷ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿನ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಮತ್ತು ಪದವಿ ಹಾಗೂ ಸ್ನಾತಕೋತ್ತರ ಮೂರು ಪ್ರತ್ಯೇಕ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗುತ್ತದೆ.
ಎಲ್ಲ ವಿಭಾಗಗಳ ವಿದ್ಯಾರ್ಥಿಗಳು ತಾವು ರಚಿಸಿದ ಪ್ರಬಂಧಗಳನ್ನು ತಮ್ಮ ಸಂಸ್ಥೆಗಳ ಮುಖ್ಯಸ್ಥರಿಗೆ ಗುರುತಿನ ಚೀಟಿ ಹಾಗೂ ಸಂಪರ್ಕ ವಿವರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಪ್ರತಿ ಶಾಲೆ, ಕಾಲೇಜು, ಸ್ನಾತಕೋತ್ತರ ಪದವಿ ವಿಭಾಗಗಳ ಮುಖ್ಯಸ್ಥರು ಅವುಗಳನ್ನು ಆಯ್ದ ಅತ್ಯುತ್ತಮ ಮೂರು ಪ್ರಬಂಧಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಪ್ಪಳ ಜಿಲ್ಲಾ ಕಚೇರಿಗೆ ತಲುಪಿಸಬೇಕು.
ಪ್ರೌಢಶಾಲಾ, ಪದವಿಪೂರ್ವ, ಕಾಲೇಜು ಹಾಗೂ ಸ್ನಾತಕೋತ್ತರ ಮೂರು ಪ್ರತ್ಯೇಕ ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 3 ಸಾವಿರ ರೂ, ದ್ವಿತೀಯ 2 ಸಾವಿರ ರೂ. ಹಾಗೂ ತೃತೀಯ ಸ್ಥಾನಕ್ಕೆ 1 ಸಾವಿರ ರೂ. ನೀಡಲಾಗುವುದು. ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 31 ಸಾವಿರ ರೂ., ದ್ವಿತೀಯ ಸ್ಥಾನಕ್ಕೆ 21 ಸಾವಿರ ರೂ. ಹಾಗೂ ತೃತೀಯ ಸ್ಥಾನಕ್ಕೆ 11 ಸಾವಿರ ರೂ.ನಗದು ಬಹುಮಾನ ನೀಡಲಾಗುವುದು.
ಪ್ರತಿಯೊಂದು ಶಾಲೆ, ಕಾಲೇಜುಗಳಿಂದ ಸ್ವೀಕೃತವಾದ ಪ್ರಬಂಧಗಳನ್ನು ಜಿಲ್ಲಾಮಟ್ಟದಲ್ಲಿ ಇರುವ ಆಯ್ಕೆ ಸಮಿತಿಯು ಪರಿಶೀಲಿಸಿ ಅವುಗಳಲ್ಲಿ ಅತ್ಯುತ್ತಮವೆನಿಸಿದ ಪ್ರತಿ ವಿಭಾಗದಲ್ಲಿನ ಮೂರು ಪ್ರಬಂಧಗಳನ್ನು ಆಯ್ಕೆ ಮಾಡಿ ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಲಾಗುವುದು. ಅವುಗಳಲ್ಲಿ ಅತ್ಯುತ್ತಮವಾದ ಪ್ರಬಂಧಗಳನ್ನು ರಾಜ್ಯಮಟ್ಟದ ಬಹುಮಾನಕ್ಕೆ ಆಯ್ಕೆ ಮಾಡಲಾಗುವುದು.
ಪ್ರತಿ ಶಾಲೆ, ಕಾಲೇಜು ಸ್ನಾತಕೋತ್ತರ ಪದವಿ ವಿಭಾಗಗಳ ಮುಖ್ಯಸ್ಥರು ಆಯ್ದ ಅತ್ಯುತ್ತಮ ಮೂರು ಪ್ರಬಂಧಗಳನ್ನು ಸೆಪ್ಟೆಂಬರ್ 22ರೊಳಗೆ ಜಿಲ್ಲಾ ವಾರ್ತಾಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಲಮಹಡಿ, ಜಿಲ್ಲಾಡಳಿತ ಭವನ, ಕೊಪ್ಪಳ ಜಿಲ್ಲೆ, ಕೊಪ್ಪಳ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಮೊಬೈಲ್ 9916111356 ಗೆ ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಶುದ್ಧ ಕೈಬರೆಹ ಅಥವಾ ನುಡಿ ಇಲ್ಲವೇ ಯುನಿಕೋಡ್ ತಂತ್ರಾAಶದಲ್ಲಿ ಬೆರಳಚ್ಚು ಮಾಡಿರಬೇಕು. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಶಾಲೆ, ಕಾಲೇಜುಗಳ ಮುಖ್ಯಸ್ಥರುಗಳ ಮೂಲಕವೇ ಜಿಲ್ಲಾ ವಾರ್ತಾಧಿಕಾರಿಗಳಿಗೆ ಪ್ರಬಂಧಗಳನ್ನು ತಲುಪಿಸಬೇಕು.
ಪ್ರಬಂಧದ ವಿಷಯಗಳು: ಪ್ರೌಢ ಶಾಲಾ ವಿಭಾಗದಲ್ಲಿ 1) ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ. 2) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. 3) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ 1) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು. 2) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.
ಪದವಿ, ಸ್ನಾತಕೋತ್ತರ ಪದವಿ ವಿಭಾಗದಲ್ಲಿ 1) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು. 2) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ. 4) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.
ಈ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ. ಆಕರವಾಗಿ ಬಳಸಿದ ಪರಾಮರ್ಶನ ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು ಎಂದು ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,