ಕಲಬುರಗಿ:ಜೂ.29: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರು ಮಾಡುವ ಜೊತೆಗೆ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಜಗದೇವ ಕುಂಬಾರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಬರೆದ ಮನವಿ ಪತ್ರವನ್ನು ಬುಧವಾರ ಅಪಾರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಮಾತನಾಡಿದ ಅವರು 2018-19 ನೇ ಸಾಲಿನಿಂದ ಮ್ಯಾನೇಜ್ ಮೆಂಟ್ ಕೋಟಾದಡಿಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕಗಳನ್ನು ಪಾವತಿಸಬಾರದೆಂದು ಆದೇಶಿಸಿದೆ ಇದು ಸೂಕ್ತವಾದ ತೀರ್ಮಾನವಲ್ಲ ಎಂದರು
ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ 2019 ರಿಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರದಿಂದ ಶಿಷ್ಯವೇತನ ನಿಲ್ಲಿಸಿರುವುದರಿಂದ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.ಕೂಡಲೇ ಈ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ದೊರೆಯುವಂತೆ ಸರ್ಕಾರ ಕ್ರಮ ವಹಿಸಬೇಕು.
ಜೋತೆಗೆ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಾದ ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ಕೊಡಬೇಕು. ಹಾಗೇಯೇ ಇಲಾಖೆ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಲ್ಯಾಪ್ಟಾಪ್ ವಿತರಣೆಗೆ ಮಾಡುವ ಕಾರ್ಯ ಸ್ಥಗಿತಗೊಂಡಿದ್ದು, ಅದನ್ನು ಪುನಃ ಆರಂಭಿಸಬೇಕು. ಪ್ರತಿ ವಸತಿ ನಿಲಯಗಳಲ್ಲಿ ಶೈಕ್ಷಣಿಕ ಪೂರಕ ಕೆಂದ್ರವಾಗಿ ನಿರ್ಮಾಣ ಮಾಡಬೇಕು. ವಸತಿ ನಿಲಯಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಹಾಗೂ ಬೇಸಿಕ್ ಕಂಪ್ಯೂಟರ್ ಕೋರ್ಸ್ ಮೂಲಕ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಪಾಲಕರು ಹಾಗೂ ಇಲಾಖೆಯ ಅಧಿಕಾರಿಗಳೂ ಒಳಗೊಂಡಂತೆ ವಸತಿ ನಿಲಯ ಮೇಲುಸ್ತುವಾರಿ ಸಮಿತಿ ರಚಿಸಿ, ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು. ವಸತಿ ನಿಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಂಥಾಲಯ ತೆರೆಯಬೇಕು. ಪ್ರಸ್ತುತ ಬೆಲೆ ಏರಿಕೆ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಶಿಷ್ಯವೇತನ ಶೇ 50% ಏರಿಕೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸೇಡಂ ಸಂಚಾಲಕ ಸುರೇಶ ಬೀಜನಳ್ಳಿ, ಪೃಥ್ವಿರಾಜ್ ಸಾಗರ ಸೇರಿದಂತೆ ಇತರರು ಇದ್ದರು.