
ತುಮಕೂರು, ಸೆ. ೧೯- ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ರವರ ಬರಹಗಳು, ಭಾಷಣಗಳು ಆದರ್ಶಸ್ಫೂರ್ತಿ ಎಂದು ಬೆಂಗಳೂರಿನ ಅಕ್ಕ ಐ.ಎ.ಎಸ್ ಅಕಾಡೆಮಿ ಸಂಸ್ಥಾಪಕ ಮತ್ತು ನಿರ್ದೇಶಕ ಡಾ.ಶಿವಕುಮಾರ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ರವರ ಸಮಗ್ರ ಬರಹಗಳು ಮತ್ತು ಭಾಷಣಗಳು ಹಾಗೂ ಸಂವಿಧಾನ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ನಡೆದು ಬಂದ ದಾರಿ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಪಾತ್ರದ ಮಹತ್ವದ ಬಗ್ಗೆ, ಅವರ ಕಾಲದಿಂದ ಇಲ್ಲಿಯವರೆಗೂ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಬದಲಾವಣೆ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಬರಹಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ನಿವೃತ್ತ ಸೈನಿಕ ಶಂಕರ್ ಎಚ್. ಮಾತನಾಡಿ, ಸೈನಿಕರಿಗೆ ಗೌರವ ಕೊಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಸೈನಿಕರು ತಮ್ಮ ಕುಟುಂಬವನ್ನು ಮರೆತು ತಮ್ಮ ದೇಶಕ್ಕಾಗಿ ಪ್ರಾಣತ್ಯಾಗ ಮಾಡುತ್ತಾರೆ. ನನ್ನ ದೇಶವೇ ನನ್ನ ಕುಟುಂಬ ಎಂದು ಹೋರಾಡುವವರು ಸೈನಿಕರು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿವಿ ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕಿ ಪ್ರೊ.ಜಯಶೀಲ ಮಾತನಾಡಿ, ಅಂಬೇಡ್ಕರ್ ಅವರು ಕಟ್ಟಿಕೊಂಡ ಸ್ವಾಭಿಮಾನದ ಬದುಕು, ಚಿಂತನೆ, ಆಲೋಚನೆಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಂಬೇಡ್ಕರ್ ರವರ ಬರಹ ಮತ್ತು ಭಾಷಣಗಳನ್ನು ತಿಳಿದು, ಎಲ್ಲರಿಗೂ ತಿಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತುಮಕೂರು ವಿವಿ ಡಾ. ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.