
ಗದಗ,ಮಾ3 : ದೇಶದ ಪ್ರಜಾಪ್ರಭುತ್ವ ಬಲಿಷ್ಟಗೊಳಿಸುವಲ್ಲಿ ಮತದಾನವು ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ಜಗದೀಶ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯಿಂದ ನಗರದ ಶಹಾಪೂರ ಪೇಟೆಯಲ್ಲಿನ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮತಗಟ್ಟೆ ಸಂಖ್ಯೆ 63 ರಲ್ಲಿ ಆಯೋಜಿಸಲಾದ ವಿದ್ಯುನ್ಮಾನ ಮತ ಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ಪ್ರಸ್ತುತಪಡಿಸಿ ಮಾತನಾಡಿದರು. ಅರ್ಹ ಮತದಾರರು ಚಲಾಯಿಸುವ ಮತವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿ.ವಿ.ಪ್ಯಾಟ ಯಂತ್ರ ಸಹಾಯವಾಗಲಿದೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಧ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ಸಾದರ ಪಡಿಸಿದರು. ಮತ ಯಂತ್ರ, ಕಂಟ್ರೋಲಿಂಗ ಯುನಿಟ ಹಾಗೂ ವಿ.ವಿ.ಪ್ಯಾಟಗಳ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯನ್ನು ಭಕ್ತಾದಿಗಳಿಗೆ, ದೇವಸ್ಥಾನ ಸಿಬ್ಬಂದಿಗೆ ,ಪೂಜಾರಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಮತದಾರರೆಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಹಂತ ಹಂತವಾಗಿ ವಿವರಿಸಿದರು.
ಪ್ರತಿ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇ.ವಿ.ಎಂ) ಹಾಗೂ ವಿ.ವಿ.ಪ್ಯಾಟ ಪೆಟ್ಟಿಗೆ ಇಡಲಾಗುತ್ತದೆ. ಮತದಾರ ಮತಗಟ್ಟೆಗೆ ಮತಚಲಾಯಿಸಲು ಬಂದಾಗ ಮತಯಂತ್ರದಲ್ಲಿ ಹಸಿರು ದೀಪ ಉರಿಯುತ್ತಿರುವದನ್ನು ಖಚಿತಪಡಿಸಿಕೊಂಡು ಬ್ಯಾಲೇಟ್ ಯುನಿಟನಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರು, ಚಿಹ್ನೆಯ ಎದುರು ಇರುವ ನೀಲಿ ಗುಂಡಿ ಒತ್ತುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನಂತರ ಕೆಂಪು ದೀಪ ಹಾಗೂ ಬೀಪ್ ಸದ್ದು ಮತದಾನವಾಗಿರುವದನ್ನು ಖಚಿತಪಡಿಸುತ್ತದೆ. ಬಳಿಕ ಪಕ್ಕದಲ್ಲಿರುವ ವಿ.ವಿ.ಪ್ಯಾಟಯಂತ್ರದಲ್ಲಿ ತಾವು ಮತ ಚಲಾಯಿಸಿದ ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಹಾಗೂ ಚಿಹ್ನೆಯನ್ನು ಒಳಗೊಂಡಿರುವ ಚೀಟಿಯನ್ನು ಏಳು ಸೆಕೆಂಡವರೆಗೆ ಮತದಾರ ನೋಡಿ ಮತದಾನವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಹಾದಿಮನಿ, ಗೀತಾ ಇಟಗಿ, ಭೂಸಶೆಟ್ಟಿ, ಹಡಗಲಿ ಮಠ ಸೇರಿದಂತೆ ಸಾರ್ವಜನಿಕರು ಇದ್ದರು.